ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ತೆರಳುವ ಕರ್ನಾಟಕದ ಭಕ್ತರಿಗೆ ತಿರುಮಲದಲ್ಲಿ ನಿರ್ಮಿಸಿರುವ ಕರ್ನಾಟಕದ ಛತ್ರವನ್ನು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಉದ್ಘಾಟಿಸಿದ್ದಾರೆ. ಕರ್ನಾಟಕದಿಂದ ತಿರುಪತಿಗೆ ತೆರಳಿ ವಾಸ್ತವ್ಯ ಹೂಡಲು ಕನ್ನಡಿಗರಿಗೆ ಇದರಿಂದ ಅನುಕೂಲವಾಗಲಿದೆ.
ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಛತ್ರ (ಮೈಸೂರು ಕಾಂಪ್ಲೆಕ್ಸ್) ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್ ಕಲ್ಯಾಣ ಮಂಟಪದಲ್ಲಿ ಕರ್ನಾಟಕದವರು ಮದುವೆ, ನಾಮಕರಣ ಮೊದಲಾದ ಶುಭ ಸಮಾರಂಭಗಳನ್ನು ಆಯೋಜನೆ ಮಾಡಬಹುದಾಗಿದೆ.
ತಿರುಮಲದಲ್ಲಿ ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ತಿರುಮಲದಲ್ಲಿ ನಿರ್ಮಾಣವಾಗಿರುವ 36 ಕೊಠಡಿಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದ ದೇವಸ್ಥಾನದ ಉದ್ಘಾಟನೆ ಸೆಪ್ಟೆಂಬರ್ ನಲ್ಲಿ ನಡೆಯಲಿದೆ. 36 ಸುಸಜ್ಜಿತ ಕೊಠಡಿಗಳ ವಿಐಪಿ ಬ್ಲಾಕ್ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣವಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿ ಗಣ್ಯರು ಭಾಗವಹಿಸಲಿದ್ದಾರೆ.
ಈ ಕಲ್ಯಾಣ ಮಂಟಪ 500 ಆಸನಗಳ ಸಾಮರ್ಥ್ಯ ಹಾಗೂ 13 ಕೊಠಡಿಗಳನ್ನು ಒಳಗೊಂಡಿದೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಶುಭ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಇದು ಲಭ್ಯವಿರಲಿದೆ. ಆನ್ ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಂಡು ಈ ಸೇವೆಯನ್ನು ಕರ್ನಾಟಕದ ಭಕ್ತರು ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯ, ಮುಜರಾಯಿ ಇಲಾಖೆ ಆಯುಕ್ತರಾದ ಎಂ. ವಿ ವೆಂಕಟೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.