Menu

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಚಾಲನೆ: ಸಚಿವ ಬೈರತಿ ಸುರೇಶ್‌

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿರುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಈಗಾಗಲೇ ಹಣ ಪಾವತಿಸಿ  ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ  ಕುರತು ಮಾಹಿತಿನೀಡಿದ ಸಚಿವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿಕೆಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು.

ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು  ಬಿಡುಗಡೆ ಮಾಡಲಾಗಿದೆ, ಅರ್ಹ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಜೂನ್ 12ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ  ಸರ್ಕಾರ ಒಟ್ಟು 86,86,25,000 ಕೋಟಿ ರೂಪಾಯಿ  ನಾಲ್ಕು ಸಾರಿಗೆ ನಿಗಮಗಳಿಗೆ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಅದರಂತೆ ನಮ್ಮ ಹಿರಿಯ ನಾಯಕರಾದ ಡಿ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನವೇ ಈ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದನ್ನು ಸಾರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದರು.

ವಿದ್ಯಾರ್ಥಿಗಳು  ಕರ್ನಾಟಕ ಒನ್, ಬೆಂಗಳೂರು ಒನ್ ಕಚೇರಿಗಳಲ್ಲಿ ಉಚಿತ ಬಸ್ ಪಾಸ್ ಗೆ ನಿಗದಿತ ಅರ್ಜಿಯನ್ನು ಸಲ್ಲಿಸಬೇಕು. ಇದನ್ನು ಪರಿಶೀಲನೆ ನಡೆಸಿದ ನಂತರ ಬಸ್ ಪಾಸ್ ಅನ್ನು ಉಚಿತವಾಗಿ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ. ಈಗಾಗಲೇ ಹಣ ಪಾವತಿ ಮಾಡಿ ಬಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ವಾಪಸ್ ನೀಡಲಾಗುವುದು. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ವಿದ್ಯಾರ್ಥಿಗಳು ಮೊಬೈಲ್, ಸೈಬರ್ ಸೆಂಟರ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ನಾಡಕಚೇರಿಗಳ ಮೂಲಕ ‘ಸೇವಾಸಿಂಧು ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು
ಆಧಾರ್ ಕಾರ್ಡ್, ಶಾಲಾ/ಕಾಲೇಜು ಪ್ರವೇಶಾತಿ ರಶೀದಿ, ವಿದ್ಯಾರ್ಥಿಯ ಇತ್ತೀಚಿನ 2 ಪಾಸ್‌ಪೋರ್ಟ್ ಅಳತೆಯ ಫೋಟೋಗಳು, ಆನ್‌ಲೈನ್ ಅರ್ಜಿಯ ಪ್ರತಿಯಲ್ಲಿ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ ಕಡ್ಡಾಯ ಸಹಿ ಮತ್ತು ಅಧಿಕೃತ ಸೀಲ್ ಅಗತ್ಯವಿದೆ.

ವಿದ್ಯಾರ್ಥಿಯ ಶಾಲಾ-ಕಾಲೇಜಿನ ಮಾಹಿತಿ ನಿಖರವಾಗಿದ್ದಲ್ಲಿ ಅರ್ಜಿಯನ್ನು ಸಾರಿಗೆ ನಿಗಮದ ಅಧಿಕಾರಿಗಳು ಅನುಮೋದಿಸುತ್ತಾರೆ. ಅನುಮೋದನೆಗೊಂಡ ತಕ್ಷಣ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೆ ಸಂದೇಶ ಸಂದೇಶ ಬರಲಿದ್ದು, ನಿಗದಿಪಡಿಸಿದ ಕೌಂಟರ್‌ಗಳಲ್ಲಿ ಪಾಸ್ ಪಡೆಯಬಹುದು.

Related Posts

Leave a Reply

Your email address will not be published. Required fields are marked *