ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹಿರಿಯ ಐಎಎಸ್ ಅಧಿಕಾರಿ ಮತ್ತು ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಅವರನ್ನು ಬಂಧಿಸಿದ್ದಾರೆ.
ಅವರ ವಿರುದ್ಧ ಪರೀಕ್ಷೆಗೂ ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಗಂಭೀರ ಆರೋಪವಿದೆ. ಈ ಅಕ್ರಮದಲ್ಲಿ ಅವರು ನೇರವಾಗಿ ಭಾಗಿಯಾಗಿರುವುದಕ್ಕೆ ಸಿಐಡಿಗೆ ಸೂಕ್ತ ಸಾಕ್ಷಿಗಳು ಲಭ್ಯವಾಗಿವೆ.
ಪಶುವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಆಯ್ಕೆಯಾದ ಕೆಲವೇ ಕೆಲವು ಅಭ್ಯರ್ಥಿಗಳಿಗೆ, ಪರೀಕ್ಷೆ ನಡೆಯುವುದಕ್ಕೂ ಮುನ್ನವೇ ಪ್ರಶ್ನೆ ಪತ್ರಿಕೆ ಹಾಗೂ ಉತ್ತರಗಳು ಲಭ್ಯವಾಗಿದ್ದವು ಎಂಬ ವಿಚಾರ ತನಿಖೆ ವೇಳೆ ಹೊರ ಬಂದಿದೆ.
ಸಂವಿಧಾನಬದ್ಧ ಹುದ್ದೆಯಲ್ಲಿದ್ದುಕೊಂಡು ಪಾವಿತ್ರ್ಯತೆ ಕಾಪಾಡಬೇಕಿದ್ದ ಅಧಿಕಾರಿಯೇ ದೊಡ್ಡ ಮಟ್ಟದ ಅಕ್ರಮದಲ್ಲಿ ಭಾಗಿಯಾಗಿರುವುದು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವುದು ಸಾಬೀತಾದ ಬಳಿಕ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಅವರನ್ನು ತೀವ್ರ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದಾರೆ. ಈ ಹಗರಣದಲ್ಲಿ ಇನ್ನು ಯಾರೆಲ್ಲ ಭಾಗಿಗಳಾಗಿದ್ದಾರೆ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.


