ಮಂಡ್ಯ: ಮಲೆನಾಡು ಭಾಗದಲ್ಲಿ ಅದರಲ್ಲೂ ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜೂನ್ ಆರಂಭಕ್ಕೂ ಮುನ್ನವೇ ಕೆಆರ್ ಎಸ್ ಜಲಾಶಯ 100 ಅಡಿ ಭರ್ತಿಯಾಗಿ ದಾಖಲೆ ಮಾಡಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಜಲಾಶಯದಲ್ಲಿ ಕಳೆದ 4 ದಿನಗಳಲ್ಲಿ 11 ಅಡಿಯಷ್ಟು ನೀರು ಭರ್ತಿಯಾಗಿದ್ದು, ಹಲವು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿಯೇ 100 ಅಡಿಯಷ್ಟು ನೀರು ಭರ್ತಿಯಾಗಿದೆ.
ಮುಂಗಾರು ಆರಂಭಕ್ಕೂ ಮುನ್ನ ಕೆಆರ್ ಎಸ್ ಡ್ಯಾಂನಲ್ಲಿ ನೀರಿನ ಮಟ್ಟ 89 ಅಡಿಗೆ ಕುಸಿದಿತ್ತು. ಇದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಭೀತಿಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದರು. ಆದರೆ ಅವಧಿಗೂ ಮುನ್ನವೇ ಸುರಿದ ಭಾರೀ ಮಳೆ ಎಲ್ಲಾ ಆತಂಕಗಳನ್ನು ನಿವಾರಿಸಿದೆ.
ಕೆಆರ್ಎಸ್ ಅಣೆಕಟ್ಟೆಗೆ 19.448 ಕ್ಯೂಸೆಕ್ಸ್ ಒಳಹರಿವು ಇದ್ದು, ಕಳೆದ 4 ದಿನಗಳಲ್ಲಿ 22,222 ಟಿಎಂಸಿ ನೀರು ಸಂಗ್ರಹವಾಗಿದ್ದು, 11 ಅಡಿ ಭರ್ತಿಯಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಜೂನ್ ಎರಡನೇ ವಾರದಲ್ಲಿ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ.
ಕೆಆರ್ ಎಸ್ ಜಲಾಶಯ 124.80 ಅಡಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. 670 ಕ್ಯುಸೆಕ್ ನೀರು ಹೊರಗೆ ಬಿಡಲಾಗುತ್ತಿದೆ.