ನಾಗಮಂಗಲ ತಾಲೂಕಿನಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವೀಂದ್ರ ಎಂಬವರು ಆರೋಪಿಸಿದ್ದಾರೆ.
ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4 ಎಕರೆ 38 ಗುಂಟೆ ಮಾತ್ರ ಸಕ್ರಮಗೊಳಿಸಲು ಅವಕಾಶವಿದೆ. ನಿಯಮಗಳನ್ನು ಉಲ್ಲಂಘಿಸಿ ಕೆಲವರಿಗೆ ಮನಬಂದಂತೆ ಹೆಚ್ಚಿನ ಭೂಮಿ ಮಂಜೂರು ಮಾಡಲಾಗಿದೆ ಎಂದು ಹೇಳಲಾಗಿದೆ. ನಸೀಮ್ ಎಂಬ ವ್ಯಕ್ತಿಗೆ 9 ಎಕರೆ 27 ಗುಂಟೆ ಜಮೀನು ಹಾಗೂ ಕಲೀಮ್ ಉಲ್ಲಾ ಹೆಸರಿಗೆ 11 ಎಕರೆ 23 ಗುಂಟೆ ಸರ್ಕಾರಿ ಭೂಮಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆಂಧ್ರ ಪ್ರದೇಶ, ಬೆಂಗಳೂರು ಹಾಗೂ ಕೇರಳ ಮೂಲದವರಿಗೆ ಭೂಮಿ ಹಂಚಿಕೆ ಮಾಡಿರುವ ಆರೋಪವೂ ಇದೆ.
ಈ ಅಕ್ರಮವು ಮುಡಾ ಹಗರಣಕ್ಕಿಂತಲೂ ದೊಡ್ಡದಾಗುವ ಸಾಧ್ಯತೆ ಇದೆ ಎಂದು ರವೀಂದ್ರ ಹೇಳಿದ್ದಾರೆ. ಪ್ರಕರಣದಲ್ಲಿ ಹಲವು ತಹಶೀಲ್ದಾರ್ಗಳು, ಉಪವಿಭಾಗಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗಿಗಳಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಅಧಿಕಾರಿಗಳಿಂದಲೇ ತನಿಖೆ ನಡೆಸಲಾಗುತ್ತಿದೆ. ಹೀಗಾಗಿ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ರವೀಂದ್ರ ಸರ್ಕಾರವನ್ನು ಆಗರಹಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಕೋಗಿಲುವಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ತೆರವು ಬಹಳಷ್ಟು ಚರ್ಚೆಗೆ ಗ್ರಾಸವಾಗಿದ್ದು, ರಾಜಕೀಯ ಮೇಲಾಟಕ್ಕೂ ಕಾರಣವಾಗಿದೆ. ಆ ಪ್ರಕರಣದ ತನಿಖೆಯಲ್ಲಿ ಸೊಸ ಹೊಸ ವಿಚಾರಗಳು ಬಯಲಾಗುತ್ತಿದ್ದು, ತೆರವುಗೊಂಡವರಿಗೆ ಸರ್ಕಾರದಿಂದ ಮನೆ ವಿತರಣೆ ಪ್ರಕ್ರಿಯೆ ಸ್ಥಗಿತಕ್ಕೆ ಕಾರಣವಾಗಿದೆ.


