ಸಕಲೇಶಪುರ: ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿ ಪ್ರದೇಶ ಸಂಪರ್ಕಿಸುವ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಸಂಭವಿಸಿದ್ದು, ಮತ್ತಷ್ಟು ಭೂಕುಸಿತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.
ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಶಿರಾಡಿ ಘಾಟ್ ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇದರಿಂದ ರಸ್ತೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.
ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಅಧಿಕಾರಿಗಳು ಇಟಾಚಿ, ಲಾರಿ ಮೂಲಕ ಮಣ್ಣು ತೆರವು ಕಾರ್ಯ ಮಾಡಿದ್ದಾರೆ.
ಬೆಂಗಳೂರಿಂದ ಮಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರಮುಖ ದಾರಿಯಾದ ಶಿರಾಡಿ ಘಾಟ್ ನಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮಣ್ಣು ಕುಸಿದ ಕೂಡಲೇ ಇಟಾಚಿ ಮೂಲಕ ಮಣ್ಣು ತೆರವು ಕಾರ್ಯಕ್ಕೆ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದು, ನಿರಂತರ ಸುರಿಯುತ್ತಿರುವ ಮಳೆಗೆ ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಕುಸಿಯುವ ಆತಂಕ ಎದುರಾಗಿದೆ.
ಇದೇ ವೇಳೆ ಚಾರ್ಮಾಡಿ ಘಾಟ್ ನಲ್ಲಿ ಕೂಡ ಮಳೆಯಿಂದಾಗಿ ಕಾರು ಪಲ್ಟಿಯಾಗಿದ್ದು ಸ್ಥಳೀಯರ ನೆರವಿನಿಂದ ಕಾರಿನಲ್ಲಿದ್ದವರನ್ನು ಪಾರು ಮಾಡಲಾಗಿದೆ.