ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ ೩೩ ಮೀಸಲಾತಿ ಕಲ್ಪಿಸುವ ಮಸೂದೆ ಜಾರಿಗೊಳಿಸಲು ಎಲ್ಲ ರಾಜಕೀಯ ಪಕ್ಷಗಳು ಒಮ್ಮತದಿಂದ ಬೆಂಬಲ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ನಾರಿ ಶಕ್ತಿ ವಂದನ್ ಅಧಿನಿಯಮ ಜಾರಿಗೆ ಸರ್ವಪಕ್ಷಗಳ ಬೆಂಬಲ ಕೋರಿದ್ದಾರೆ. ಮಹಿಳೆಯರಿಗೆ ದೇಶದ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ದೊರೆಯಬೇಕಾದ ಅಗತ್ಯವನ್ನು ವಿವರಿಸಿದರು. ಪಂಚಾಯಿತಿಗಳು, ನಗರಸಭೆಗಳು ಹಾಗೂ ಮಹಾನಗರ ಪಾಲಿಕೆಗಳಲ್ಲಿ ಮಹಿಳಾ ಜನಪ್ರತಿನಿಧಿಗಳು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಸ್ಥಳೀಯ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಮಹಿಳೆಯರ ರಾಜಕೀಯ ಸಬಲೀಕರಣ ಸ್ಥಳೀಯ ಸಂಸ್ಥೆಗಳ ಮಟ್ಟದಿಂದ ದೇಶದ ಅತ್ಯುನ್ನತ ಚುನಾಯಿತ ಸಂಸ್ಥೆಗಳವರೆಗೆ ವಿಸ್ತರಿಸಬೇಕೆಂಬ ಉದ್ದೇಶವನ್ನು ಅಧಿನಿಯಮ ಹೊಂದಿದೆ. 2023ರಲ್ಲಿ ಸಂಸತ್ತು ಈ ಕಾನೂನನ್ನು ಅಂಗೀಕರಿಸಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಸ್ಥಾನ ಮೀಸಲಿಡುವ ಪ್ರಸ್ತಾವನೆ ಇದರಲ್ಲಿದೆ. ಮಹಿಳಾ ಮೀಸಲಾತಿ ವಿಚಾರ ಹಲವು ದಶಕಗಳಿಂದ ರಾಜಕೀಯ ಭಿನ್ನಾಭಿಪ್ರಾಯಗಳಲ್ಲಿ ಸಿಲುಕಿಕೊಂಡಿದೆ ಎಂದು ಪ್ರಧಾನಿ ಹೇಳಿದರು.
ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಬದಿಗಿಟ್ಟು ಮಹಿಳೆಯರ ಸಾಮರ್ಥ್ಯವನ್ನು ಗೌರವಿಸುವ ಮೂಲಕ ಅವರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲು ಎಲ್ಲ ಪಕ್ಷಗಳು ಮುಂದಾಗಬೇಕು ಎಂದು ಕರೆ ನೀಡಿದರು. ಮಹಿಳೆಯರು ನೀತಿ ರೂಪಿಸುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರೆ ಆಡಳಿತ ಮತ್ತು ಅಭಿವೃದ್ಧಿಗೆ ಹೊಸ ಆಯಾಮ ಸಿಗಲಿದೆ. ರಾಜ್ಯ ವಿಧಾನಸಭೆಗಳು ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ನ್ಯಾಯಯುತ ಪಾಲು ದೊರೆಯುವಂತೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ರಾಜಕೀಯ ಪಕ್ಷಗಳನ್ನು ಆಗ್ರಹಿಸಿದರು.


