ಶಿವಮೊಗ್ಗ ನಗರದ ತಾಲೂಕು ಕಚೇರಿಯ ಆಡಳಿತ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರ್ಚ್ ವಾರಂಟ್ನೊಂದಿಗೆ ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ.
ಶಿವಮೊಗ್ಗದ ಗೋವಿಂದಾಪುರದಲ್ಲಿ 11 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಪರಭಾರೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂಬ ಗಂಭೀರ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಲೋಕಾಯುಕ್ತ ಈ ಕಾರ್ಯಾಚರಣೆ ಕೈಗೊಂಡಿದೆ.
ಗೋವಿಂದಾಪುರ ವ್ಯಾಪ್ತಿಯ ಎರಡು ಪ್ರತ್ಯೇಕ ಖಾತೆಗಳಲ್ಲಿನ ಸರ್ಕಾರಿ ಜಮೀನಿನಲ್ಲಿ ಈಗಾಗಲೇ 33 ಶೆಡ್ಗಳನ್ನು ನಿರ್ಮಿಸಲಾಗಿದೆ. ಈ ಶೆಡ್ಗಳಲ್ಲಿ ವಾಸವಿರುವವರಿಗೆ ಖಾತೆ ಮಾಡಿಸಿಕೊಡುವುದಾಗಿ ನಂಬಿಸಿ ಕೆಲವು ಮಧ್ಯವರ್ತಿಗಳು ಹಣ ಪಡೆದಿದ್ದಾರೆ ಹಾಗೂ ಇದಕ್ಕೆ ಪೂರಕವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ದೂರು ಪರಿಶೀಲಿಸಿ ತನಿಖೆ ಕೈಗೆತ್ತಿಕೊಂಡ ಲೋಕಾಯುಕ್ತ ಅಧಿಕಾರಿಗಳು, ಲೋಕಾಯುಕ್ತ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ತಾಲೂಕು ಕಚೇರಿಯ ಆಡಳಿತ ವಿಭಾಗದ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಇಡೀ ದಿನ ಅಗಸವಳ್ಳಿ ಪಿಡಿಒ ಕಚೇರಿಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳ ತಂಡ ಸುದೀರ್ಘ ಪರಿಶೀಲನೆ ನಡೆಸಿತ್ತು.


