ಬೈಕ್ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ರಾಮನಗರದ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ.
ಪ್ರಶಾಂತ್ (19) ಮೃತಪಟಟ್ಟ ಯುವಕ. ನಾಗೋಹಳ್ಳಿ ಗ್ರಾಮದ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ. ರಾತ್ರಿ ಸುರಿದ ಮಳೆಗೆ ಬುಡ ಸಮೇತ ಎದ್ದ ಮರ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಯುವಕ ಸ್ಥಳದಲ್ಲೇ ಅಸು ನೀಗಿದ್ದಾನೆ.
ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿರುಗಾಳಿ ಮಳೆಗೆ ವಿಮಾನ ಜಖಂ
ಹಠಾತ್ ಬಿರುಗಾಳಿ ಸಹಿತ ಭಾರೀ ಮಳೆಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ಏರ್ ಇಂಡಿಯಾ ವಿಮಾನಗಳು ಜಖಂಗೊಂಡಿವೆ.
ಬಿರುಗಾಳಿಗೆ ಸಿಕ್ಕಿ ರನ್ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿಯಾದ ಪರಿಣಾಮ ಏರ್ ಇಂಡಿಯಾ ಸಂಸ್ಥೆಯ ಮೂರು ವಿಮಾನಗಳು ಹಾನಿಗೊಂಡಿವೆ.
ಏರ್ ಟ್ರಾಫಿಕ್ ಕಂಟ್ರೋಲ್ನಿಂದ ಹವಾಮಾನ ವೈಪರೀತ್ಯದ ಬಗ್ಗೆ ಯಾವುದೇ ಮುನ್ಸೂಚನೆ ಸಿಗದೇ ಇದ್ದುದರಿಂದ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಆದ್ದರಿಂದ ಘಟನೆ ಸಂಭವಿಸಿದೆ ಎಂದು ವಿಮಾನ ನಿಲ್ದಾಣದ ಆಡಳಿತ ಮಂಡಳಿ ತಿಳಿಸಿದೆ.
ರಾಜ್ಯದ ಹಲವೆಡೆ ಐದು ದಿನ ಮಳೆ
ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ರಾಯಚೂರು, ಕಲ್ಬುರ್ಗಿ, ಕೊಪ್ಪಳ, ಹುಬ್ಬಳ್ಳಿ ಧಾರವಡ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.


