ಬೆಂಗಳೂರು ವೈಟ್ಫೀಲ್ಡ್ನಲ್ಲಿ ಆರು ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಹೊರ ಬಂದಿದೆ.
ಆರೋಪಿಯ ಮಗುವಿನ ತಾಯಿಯ ಮೇಲಿನ ದ್ವೇಷಕ್ಕೆ ಮಗುವನ್ನು ಕೊಂದ ಪಾಪಿ ಚರಂಡಿಗೆ ಬಿಸಾಕಿದ್ದ. ಕೊಲೆಗೂ ಮುನ್ನಮಗುವಿನ ಮೇಲೆ ಆರೋಪಿ ಅತ್ಯಾಚಾರವೆಸಗಿರುವುದು ವಿಚಾರಣೆ ವೇಳೆ ಬಹಿರಂಗಗೊಂಡಿದೆ. ಆರೋಪಿಯು ಈ ಹಿಂದೆಯೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನೆಂಬುದು ಗೊತ್ತಾಗಿದ್ದು, ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಮಗುವಿನ ಕೊಲೆ ಪ್ರಕರಣದ ಆರೋಪಿ ಯುಸೂಫ್ ಮೀರ್ ಎಂಬಾತನನ್ನು ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯ ತಾಯಿಯೊಂದಿಗೆ ಜಗಳ ಮಾಡಿಕೊಂಡಿದ್ದ ಆರೋಪಿ ಮಗುವನ್ನು ಕಿಡ್ನಾಪ್ ಮಾಡಿದ್ದ. ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿ ಪ್ಲಾಸ್ಟಿಕ್ ವೈರ್ ಬಳಸಿ ಕುತ್ತಿಗೆ ಬಿಗಿದು ಕೊಲೆ ಮಾಡಿ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ರಸ್ತೆ ಬದಿ ಚರಂಡಿಗೆ ಎಸೆದಿದ್ದಾನೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ.
ಮಗು ನಾಪತ್ತೆಯಾದ ಒಂದು ದಿನದ ಬಳಿಕ ಪೋಷಕರು ದೂರು ನೀಡಿದ್ದು, ರಸ್ತೆ ಬದಿಯ ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಪತ್ತೆಯಾಗಿತ್ತು. ಆರೋಪಿ ವಿರುದ್ಧ ಈಗಾಗಲೇಎರಡು ಗಂಭೀರ ಪ್ರಕರಣಗಳು ದಾಖಲಾಗಿವೆ. ಆತ ಮಕ್ಕಳ ಮೇಲೆ ಲೈಂಗಿಕ ದೌರ್ಜ್ಯನ್ಯ ನಡೆಸುವ ಮನಸ್ಥಿತಿಯ ವ್ಯಕ್ತಿ ಎಂಬುದು ತನಿಖೆಯಲ್ಲಿ ತಿಳಿದುಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


