ವಿದ್ಯಾರ್ಥಿಗಳ ಆತ್ಮಹತ್ಯೆ ಅಥವಾ ಯಾವುದೇ ಅಸಹಜ ಸಾವು ಸಂಭವಿಸಿದ ಕೂಡಲೇ ಸಂಬಂಧಿತ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ನೀಡುವಂತೆ ಸರ್ಕಾರ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ, ಶಿಕ್ಷಣ ಸಂಸ್ಥೆಗಳ ಹೊಣೆಗಾರಿಕೆಯನ್ನು ಬಲಪಡಿಸುವ ಕ್ರಮವಾಗಿ ಸರ್ಕಾರದ ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯು ಅನುದಾನಿತ ಹಾಗೂ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಘಟನೆ ಕಾಲೇಜು ಆವರಣ, ವಸತಿ ನಿಲಯ, ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಅಥವಾ ಬೇರೆ ಯಾವುದೇ ಸ್ಥಳದಲ್ಲಿ ನಡೆದರೂ ಈ ನಿಯಮ ಅನ್ವಯವಾಗಲಿದೆ.
ನ್ಯಾಷನಲ್ ಕ್ರೈ ಬ್ಯೂರೋ ನಿಡುವ ವಾರ್ಷಿಕ ಆತ್ಮಹತ್ಯೆ ಅಂಕಿ-ಅಂಶಗಳ ಪ್ರಕಾರ, ವಿದ್ಯಾರ್ಥಿ ಆತ್ಮಹತ್ಯೆಗಳ ಸಂಖ್ಯೆಯಲ್ಲಿ ಕರ್ನಾಟಕ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದೆ. 2023ರ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ 855 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಷಕರ ಅಥವಾ ಕುಟುಂಬದ ಒತ್ತಡ, ರ್ಯಾಗಿಂಗ್, ಖಿನ್ನತೆ ಸೇರಿದಂತೆ ನಾನಾ ಕಾರಣಗಳ ಹಿನ್ನೆಲೆಯಲ್ಲಿ ಈ ಆತ್ಮಹತ್ಯೆಗಳು ನಡೆದಿವೆ.
ಸುಪ್ರೀಂ ಕೋರ್ಟ್ನ ನಿರ್ದೇಶನಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಜುಲೈ 22ರಂದು ಹೊರಡಿಸಲಾದ ಸುತ್ತೋಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆ, ಮಾನಸಿಕ ಆರೋಗ್ಯ ಹಾಗೂ ಕಾನೂನುಬದ್ಧ ನಿಯಮಗಳ ಪಾಲನೆ ಕುರಿತು ವಿಶ್ವವಿದ್ಯಾಲಯಗಳು, ಕಾಲೇಜುಗಳು, ವಸತಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿನಿಲಯಗಳು ಮತ್ತು ಪಿಜಿ ವಸತಿಗಳು ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ತಿಳಿಸಲಾಗಿದೆ.
ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಾಗಲಿ ಅಥವಾ ದೂರಶಿಕ್ಷಣ/ಆನ್ಲೈನ್ ಶಿಕ್ಷಣದಲ್ಲಿ ದಾಖಲಾದ ವಿದ್ಯಾರ್ಥಿಗಳಾಗಲಿ, ಆತ್ಮಹತ್ಯೆ ಅಥವಾ ಅಸಹಜ ಸಾವು ಸಂಭವಿಸಿದ ಬಗ್ಗೆ ಮಾಹಿತಿ ದೊರಕಿದ ತಕ್ಷಣ ಘಟನೆ ಎಲ್ಲೇ ನಡೆದಿದ್ದರೂ ಸಂಬಂಧಿತ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ.
ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ಅಸಹಜ ಸಾವಿನ ಕುರಿತು ವಾರ್ಷಿಕ ವರದಿಯನ್ನು ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸೇರಿದಂತೆ ಸಂಬಂಧಿತ ಆಡಳಿತ ಇಲಾಖೆಗೆ ಸಲ್ಲಿಸಬೇಕು. ವೃತ್ತಿಪರ ಕೋರ್ಸ್ ಸಂಸ್ಥೆ ಎಐಸಿಟಿಇ ರಾಷ್ಟ್ರೀಯ ವೈದ್ಯಕೀಯ ಆಯೋಗ , ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಸೇರಿದಂತೆ ಸಂಬಂಧಿತ ನಿಯಂತ್ರಣ ಸಂಸ್ಥೆಗಳಿಗೂ ವರದಿ ಸಲ್ಲಿಸಬೇಕು.
ವಸತಿ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ದಿನದ 24 ಗಂಟೆಯೂ ಅರ್ಹ ವೈದ್ಯಕೀಯ ನೆರವು ಲಭ್ಯವಾಗಬೇಕು. ಕ್ಯಾಂಪಸ್ನಿಂದ ಒಂದು ಕಿಲೋಮೀಟರ್ ವ್ಯಾಪ್ತಿಯ ಮಾನ್ಯತೆ ಪಡೆದ ವೈದ್ಯಕೀಯ ಕೇಂದ್ರದ ಮೂಲಕ ಲಭ್ಯವಿರಬೇಕು ಎಂದು ಸುತ್ತೋಲೆ ತಿಳಿಸಿದೆ.
ಯುಜಿಸಿ ನಿರ್ದೇಶಿಸಿರುವ ಎಲ್ಲಾ ಕಾನೂನುಬದ್ಧ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಕುರಿತು ತ್ರೈಮಾಸಿಕ ಹಾಗೂ ವಾರ್ಷಿಕ ಅನುಸರಣೆ ವರದಿಗಳನ್ನು ಆಡಳಿತ ಇಲಾಖೆಗೆ ಸಲ್ಲಿಸಬೇಕು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಸಮಯಕ್ಕೆ ಸರಿಯಾಗಿ ವಿತರಿಸಬೇಕು. ವಿಳಂಬವಾದರೆ ತಕ್ಷಣವೇ ಸಂಬಂಧಿತ ಇಲಾಖೆಗೆ ಮಾಹಿತಿ ನೀಡಬೇಕು. ಶಿಕ್ಷಣ ಸಂಸ್ಥೆಗಳು ತಮ್ಮ ನೀತಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಪರಿಷ್ಕರಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.


