ಬೆಂಗಳೂರು: ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹಾನಗಲ್ಲಿನಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆಯಾಗಿದೆ ಎಂದು ಕರ್ನಾಟಕ ವಿಪತ್ತು ನಿರ್ವಹಣೆ ಘಟಕದ ವರದಿ ಹೇಳಿದೆ.
ಮೇ 28ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, 170 ತಾಲ್ಲೂಕುಗಳಲ್ಲಿ ಪ್ರವಾಹ, ಭೂಕುಸಿತದ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ನೀಡಿದೆ.
ಮೇ 26 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.
ಮೇ 28ರವರೆಗೆ ಕೊಡಗು ಜಿಲ್ಲೆಯ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 144 ಮಿ.ಮೀ. ಮಳೆಯಾಗಿದ್ದು, ರಾಜ್ಯದಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕಲ್ಡಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 139 ಮಿ.ಮೀ. ಹಾಗೂ ಹೆಮಾಂಡಿ ಗ್ರಾಮ ಪಂಚಾಯಿತಿಯಲ್ಲಿ 133 ಮಿ.ಮೀ. ಮಳೆಯಾಗಿದ್ದು, ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿದೆ.
ಸಾಮಾನ್ಯವಾಗಿ ಕರಾವಳಿ ಜಿಲ್ಲೆಗಳಾದ ದಕ್ದಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಸರಾಸರಿ 123 ಮಿ.ಮೀ. ಮಳೆಯಾಗುತ್ತದೆ. ಆದರೆ ಈ ಬಾರಿ 515 ಮಿ.ಮೀ. ಮಳೆಯಾಗಿದ್ದು, ಶೇ.316ರಷ್ಟು ಹೆಚ್ಚು ಮಳೆಯಾಗುವ ಮೂಲಕ ದಾಖಲೆಯಾಗಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.