ದ್ವಿಚಕ್ರ ವಾಹನಕ್ಕೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಮೃತಪಟ್ಟವರು. ಗಣೇಶ ಹಬ್ಬ ಮುಗಿಸಿ ಮುಂಜಾನೆ ಬೆಂಗಳೂರಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಕ್ಗಳ ಡಿಕ್ಕಿ: ಇಬ್ಬರ ಸಾವು
ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಕೆಳಗೆ ಸವಾರರ ಮೇಲೆ ಬಸ್ ಹರಿದು ಇಬ್ಬರು ಸ್ಥಳದಲ್ಲೇ ಅಸು ನೀಗಿರುವ ಘಟನೆ ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ನಡೆದಿದೆ.
ಮೃತರನ್ನು ರಾಜಸ್ಥಾನದವರೆಂದು ಗುರುತಿಸಲಾಗಿದೆ, ನಿಖರವಾಗಿ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಪೊಲೀಸರು ಅವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಡೂರಿನಿಂದ ಚಿಕ್ಕಮಗಳೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಮತ್ತೊಂದು ಬೈಕ್ ನಡುವೆ ಹಳೇಹಟ್ಟಿ ಗೇಟ್ ಬಳಿ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಇಬ್ಬರು ಸವಾರರು ರಸ್ತೆ ಮೇಲೆ ಬಿದ್ದಾಗ ಹಿಂದಿನಿಂದ ಬಂದ ಸರ್ಕಾರಿ ಬಸ್ ಅವರ ಮೇಲೆಯೇ ಹರಿದಿದೆ.
ಘಟನೆಯಲ್ಲಿ ಮತ್ತೊಂದು ಬೈಕ್ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


