ಬೆಂಗಳೂರು: ಆನ್ಲೈನ್, ಆಫ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಕಾನೂನುಬಾಹಿರವಾಗಿ ಬಂಧಿಸಿರುವ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಅವರ ಪತ್ನಿ ಡಿ.ಆರ್.ಚೈತ್ರಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ಕ್ರಮ ಕಾನೂನುಬಾಹಿರ ಎಂದು ಘೋಷಿಸುವಂತೆ ಪತ್ನಿ ಚೈತ್ರಾ ತಮ್ಮ ಅರ್ಜಿಯಲ್ಲಿ ಕೋರಿದ್ದರು. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಆದೇಶವನ್ನು ಬುಧವಾರ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ ಪ್ರಕಟಿಸಿ ಪತ್ನಿ ಚೈತ್ರಾ ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.
ಅಕ್ರಮ ಬೆಟ್ಟಿಂಗ್ ಆರೋಪ ಸಂಬಂಧ ಅರ್ಜಿದಾರರ ಪತಿಯ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದು, ನಾಲ್ಕು ಪ್ರಕರಣಗಳು ಅವರ ಪರವಾಗಿಯೇ ಇದೆ. ಆದರೆ, ಮತ್ತೊಂದು ಪ್ರಕರಣ ವಿಚಾರಣಾ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಬಿಡುಗಡೆಗೆ ಆದೇಶ ನೀಡಲಾಗದು ಎಂದು ನ್ಯಾಯಪೀಠ ತಿಳಿಸಿದೆ.
ಬಂಧನ ಸರಿಯಾದ ಕ್ರಮ:
ಪ್ರಕರಣ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ ಇಡಿ ಪರ ವಕೀಲರು, ‘ಶಾಸಕ ವೀರೇಂದ್ರ ಅವರನ್ನು ಬಂಧಿಸಿರುವ ಕ್ರಮ ಸರಿಯಾಗಿದೆ. ಅರ್ಜಿದಾರರ ಪತಿಯ ವಿರುದ್ಧ 30 ಸಾವಿರ ವಂಚನೆ ಮಾಡಿರುವ ಆರೋಪ ಸಂಬಂಧ ಸತೀಶ್ ಎಂಬವರು ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಮಾತ್ರ ತನಿಖೆ ನಡೆಯುತ್ತಿಲ್ಲ. ಆ ಆರೋಪಕ್ಕೆ ಸಂಬಂಧಿಸಿದಂತೆ ಸುತ್ತಲಿನ ಪ್ರಕರಣಗಳ ತನಿಖೆ ಮತ್ತು ವಿಚಾರಣೆ ನಡೆಯಲಿದೆ” ಎಂದು ಪೀಠಕ್ಕೆ ವಿವರಿಸಿದ್ದರು.
‘ಅಲ್ಲದೇ, ಆನ್ಲೈನ್ ಹಣ ವರ್ಗಾವಣೆ (ಫೋನ್ ಪೇ) ಮಾಡಿರುವ ಸಂಬಂಧವೂ ತನಿಖೆ ನಡೆಸಬೇಕಾಗಿದೆ. ಬೇರೆ ಬೇರೆ ಕಂಪನಿಗಳ ಮೂಲಕ ಅರ್ಜಿದಾರರ ಪತಿ ವ್ಯವಹಾರ ನಡೆಸುತ್ತಿದ್ದಾರೆ. ಗೇಮಿಂಗ್ ಕಂಪನಿಗಳ ಮೂಲಕ ಗ್ರಾಹಕರನ್ನು ವಂಚನೆ ಮಾಡಿದ್ದಾರೆ. ಕೆವೈಸಿ ನೀಡದೆಯೂ ಹಣ ಪಡೆಯಲಾಗುತ್ತಿದೆ. ರಾಜ್ಯದಲ್ಲಿ ಅಕ್ರಮ ಬೆಟ್ಟಿಂಗ್ ಮಾಡಿ, ಸಂಗ್ರಹಿಸಿದ ಹಣವನ್ನು ಶ್ರೀಲಂಕಾ ದುಬೈ ಸೇರಿದಂತೆ ವಿದೇಶಗಳಲ್ಲಿ ಕೆಸಿನೋಗಾಗಿ ಹೂಡಿಕೆ ಮಾಡಲಾಗಿದೆ. ಅರ್ಜಿದಾರರ ಪತಿಯ ವಿರುದ್ಧದ ಎಲ್ಲ ಆರೋಪಗಳನ್ನು ಕ್ರೋಢೀಕರಿಸಿ ತನಿಖೆ ನಡೆಸಲಿದೆ. ಹೀಗಾಗಿ, ಅರ್ಜಿ ವಜಾಗೊಳಿಸಬೇಕು” ಎಂದು ಮನವಿ ಮಾಡಿದ್ದರು.
2011ರಲ್ಲಿ ಪ್ರಕರಣ:
ಇದಕ್ಕೆ ಆಕ್ಷೇಪಿಸಿದ್ದ ಅರ್ಜಿದಾರರ ಪರ ವಕೀಲರು, ”ವೀರೇಂದ್ರ ವಿರುದ್ಧ 2011ರ ಕ್ರಿಕೆಟ್ ಬೆಟ್ಟಿಂಗ್ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆ ಪ್ರಕರಣದ ಆರೋಪಗಳಿಂದ 2014ರಲ್ಲಿ ಅವರು ಖುಲಾಸೆಯಾಗಿದ್ದರು. ಇದೇ ಪ್ರಕರಣ ಸಂಬಂಧ 2015ರ ಮತ್ತೊಂದು ಎಫ್ಐಆರ್ನ್ನು ಹೈಕೋರ್ಟ್ ರದ್ದು ಮಾಡಿದೆ. 2016ರಲ್ಲಿ ದಾಖಲಾದ ಪ್ರಕರಣದಲ್ಲಿ ಕೆ.ಸಿ.ವೀರೇಂದ್ರ ಅವರು ಆರೋಪಿಯಾಗಿರಲಿಲ್ಲ.
2022ರ ದಾಖಲಾದ ಪ್ರಕರಣ ಸಂಬಂಧ ಆರೋಪಪಟ್ಟಿಯಲ್ಲಿ ವೀರೇಂದ್ರ ಅವರ ಹೆಸರನ್ನು ಕೈಬಿಡಲಾಗಿತ್ತು. ಮತ್ತೆರಡು ಪ್ರಕರಣಗಳು 2024ರಲ್ಲಿ ಮುಕ್ತಾಯಗೊಂಡಿವೆ. ಮುಕ್ತಾಯಗೊಂಡಿರುವ ಪ್ರಕರಣಗಳನ್ನು ಉಲ್ಲೇಖಿಸಿ ಇ.ಡಿ ಪ್ರಕರಣ (ಇಸಿಐಆರ್) ದಾಖಲಿಸಿಕೊಳ್ಳಲಾಗಿದೆ” ಎಂದು ಪೀಠಕ್ಕೆ ತಿಳಿಸಿದ್ದರು.
ಅಲ್ಲದೇ, ವೀರೇಂದ್ರ ಅವರು ಸಿಕ್ಕಿಂನಲ್ಲಿ ಇದ್ದಾಗ ಮನೆ, ವ್ಯಾಪಾರ ಸ್ಥಳದಲ್ಲಿ ಇ.ಡಿ ದಾಳಿ ನಡೆಸಿದೆ. ಅಂದರೆ ವೀರೇಂದ್ರ ಅವರ ಅನುಪಸ್ಥಿತಿಯಲ್ಲಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ. ಪಿಎಂಎಲ್ ಕಾಯ್ದೆಯಡಿ ಯಾವುದೇ ಅನುಸೂಚಿತ ಪ್ರಕರಣ ಇಲ್ಲದಿದ್ದರೂ ವೀರೇಂದ್ರ ಅವರನ್ನು ಬಂಧಿಸಲಾಗಿದೆ.
ಪಿಎಂಎಲ್ ಕಾಯ್ದೆಯಡಿ ಶಾಸಕರನ್ನು ಬಂಧಿಸುವ ಮುನ್ನ ಸಮನ್ಸ್ ನೀಡಬೇಕು. ಆದರೆ, ಈ ಪ್ರಕರಣದಲ್ಲಿ ಬಂಧನ ಮಾಡುವವರೆಗೂ ಸಮನ್ಸ್ ನೀಡಿಲ್ಲ. ಬಂಧನ ಮೆಮೊವನ್ನು ಸಕಾಲಕ್ಕೆ ನೀಡಿಲ್ಲ. ಯಾವ ಆಧಾರದಲ್ಲಿ ಬಂಧಿಸಲಾಗುತ್ತಿದೆ ಎಂಬುದಕ್ಕೆ ಸೂಕ್ತ ಕಾರಣ ನೀಡಿಲ್ಲ” ಎಂದು ವಕೀಲರು ವಿವರಣೆ ನೀಡಿದ್ದರು.
ಪ್ರಕರಣದ ಹಿನ್ನೆಲೆ:
ಅಕ್ರಮವಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ನಡೆಸಿದ ಆರೋಪದಲ್ಲಿ ಶಾಸಕ ವೀರೇಂದ್ರ ಅವರನ್ನು ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿರುವ ಅವರ ಪತ್ನಿ, ತನ್ನ ಪತಿಯನ್ನು ಕಾನೂನುಬಾಹಿರವಾಗಿ ಬಂಧನ ಮಾಡಲಾಗಿದೆ. ಇದು ಸಂವಿಧಾನದ ಪರಿಚ್ಛೇದ 19 ಮತ್ತು 21ರಲ್ಲಿ ಲಭ್ಯವಾಗಿರುವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ. ಆದ್ದರಿಂದ ತಕ್ಷಣ ವೀರೇಂದ್ರ ಅವರನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.