ದೇಶಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಕೆಲವೆಡೆ ಪ್ರವಾಹದ ಭೀತಿ ಉಂಟಾಗಿದೆ.
ಮುಂದಿನ ಐದು ದಿನಗಳವರೆಗೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜಸ್ಥಾನದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಹೈರಾಣಾಗಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹವುಂಟಾಗಿ ರಸ್ತೆಗಳು ಮಳೆನೀರಿನಿಂದ ತುಂಬಿಹೋಗಿವೆ. ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಮತ್ತು ಪೂರ್ವ ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 26ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೇರಳ, ಮಾಹೆ, ತಮಿಳುನಾಡು, ಮತ್ತು ತೆಲಂಗಾಣದಲ್ಲಿ ಜುಲೈ 22 ರಿಂದ 24ರವರೆಗೆ ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಕರ್ನಾಟಕದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಮತ್ತು ರಾಜಸ್ಥಾನದಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರಾಖಂಡದ ಡೆಹ್ರಾಡೂನ್, ತೆಹ್ರಿ, ಪೌರಿ, ನೈನಿತಾಲ್, ಚಂಪಾವತ್, ಮತ್ತು ಉಧಮ್ ಸಿಂಗ್ ನಗರದ ಕೆಲವು ಪ್ರದೇಶಗಳಲ್ಲಿ ಜುಲೈ 20 ಮತ್ತು 21ರಂದು ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಮಳೆ ಜೊತೆಗೆ ಭೂಕುಸಿತದ ಆತಂಕ ಎದುರಾಗಿದೆ.
ದೆಹಲಿ-ಎನ್ಸಿಆರ್ನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಬಿಹಾರ, ಜಾರ್ಖಂಡ್, ಛತ್ತೀಸ್ಗಢ, ಹಿಮಾಲಯದ ಪಶ್ಚಿಮ ಬಂಗಾಳ, ಮತ್ತು ಸಿಕ್ಕಿಂನಲ್ಲಿ ಮುಂದಿನ 3 ದಿನ ವಿಪರೀತ ಮಳೆಯಾಗುವ ಸಾಧ್ಯತೆ ಇದೆ. ಜುಲೈ 23 ರಿಂದ 26ರವರೆಗೆ ಈ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಬಹುದು. ಜಮ್ಮು ಮತ್ತು ಕಾಶ್ಮೀರದಲ್ಲಿ ಜುಲೈ 24ರವರೆಗೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ. ಚಿನಾಬ್ ಮತ್ತು ಜೀಲಂ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜನರಿಗೆ ನದಿಗಳಿಂದ ದೂರವಿರುವಂತೆ ಎಚ್ಚರಿಕೆ ನೀಡಲಾಗಿದೆ.