ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 187 ಕೋಟಿ ಹಣವನ್ನು ಲೂಟಿ ಮಾಡಿದ ಬಿ.ನಾಗೇಂದ್ರ ಅವರನ್ನು ರಕ್ಷಿಸಲು ವಿಧಾನಮಂಡಲ ಅಧಿವೇಶನವನ್ನೇ ರದ್ದು ಮಾಡಿದ ಕಾಂಗ್ರೆಸ್ ಸರ್ಕಾರ, ಕೊನೆಗೂ ನಮ್ಮ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದಿದೆ. ಬಿಜೆಪಿಯಿಂದ ಪಾದಯಾತ್ರೆ ಘೋಷಣೆ ಮಾಡಿದ ಕೂಡಲೇ ಬೆವರಿ ಬೆದರಿದ ಕಾಂಗ್ರೆಸ್ ಕೂಡಲೇ ರಾಜೀನಾಮೆ ಪಡೆದು ಅಲ್ಪ ಸ್ವಲ್ಪ ಮಾನ ಉಳಿಸಿಕೊಂಡಿದೆ. ಮಾತು ಮಾತಿಗೂ ಬಾಬಾ ಸಾಹೇಬ್ ಅಂಬೇಡ್ಕರರ ಹೆಸರು ಹೇಳಿಕೊಂಡು ದಲಿತರನ್ನು ತುಳಿದ ಕಾಂಗ್ರೆಸ್ಗೆ ದಲಿತರ ಆಕ್ರೋಶದ ಬಿಸಿ ತಟ್ಟಿದೆ. ಕರ್ನಾಟಕದ ರಾಜಕೀಯದಲ್ಲಿ ಭ್ರಷ್ಟರನ್ನು ಸಚಿವರಾಗಿಟ್ಟುಕೊಂಡು ಆಡಳಿತ ನಡೆಸಲು ಸಾಧ್ಯವೇ ಇಲ್ಲ ಎಂಬ ಸಂದೇಶ ರವಾನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಡಿರುವ ಅವರು, ಇದು ಕೇವಲ ರಾಜೀನಾಮೆಯಲ್ಲ, ಇದು ಕಾಂಗ್ರೆಸ್ ಸರ್ಕಾರದ ಅಹಂಕಾರದ ಮೇಲೆ ಬಿದ್ದ ಬಲವಾದ ಹೊಡೆತ! ಇದು ಕೋಟ್ಯಂತರ ದಲಿತರಿಗೆ ಸಿಕ್ಕಿರುವ ದಿಗ್ವಿಜಯ. ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿ ಲೂಟಿ ಮಾಡಿದ ಆರೋಪದ ವಿರುದ್ಧ ಬಿಜೆಪಿ-ಜೆಡಿಎಸ್ ಸದನದ ಒಳಗೆ ಹಾಗೂ ಹೊರಗೆ ನಿರಂತರವಾಗಿ ಹೋರಾಟ ಮಾಡಿತ್ತು ಎಂದರು.
ನಾವು ಪ್ರಶ್ನೆ ಕೇಳಿದಾಗ – ಸದನದಿಂದ ಪಲಾಯನ, ನಾವು ಉತ್ತರ ಕೇಳಿದಾಗ – ಅಧಿವೇಶನ ಮೊಟಕು, ನಾವು ಸತ್ಯ ಬಯಲು ಮಾಡಿದಾಗ – ಆರೋಪಿಗಳನ್ನು ರಕ್ಷಿಸುವ ಸರ್ಕಸ್. ಆದರೆ ಮುಖ್ಯಮಂತ್ರಿ @DKShivakumar ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದು ವಿಷಯ ಅರ್ಥ ಮಾಡಿಕೊಳ್ಳಬೇಕು, ಸದನ ಮುಂದೂಡಬಹುದು, ಚರ್ಚೆ ತಪ್ಪಿಸಿಕೊಳ್ಳಬಹುದು, ಸತ್ಯವನ್ನು ಮಾತ್ರ ಮುಚ್ಚಿಡಲು ಸಾಧ್ಯವಿಲ್ಲ.
ನಮ್ಮ ನಿರಂತರ ಹೋರಾಟ, ಜನಾಕ್ರೋಶ ಮತ್ತು ನಮ್ಮ ಪಾದಯಾತ್ರೆಯ ಘೋಷಣೆಯ ಬೆನ್ನಲ್ಲೇ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದು ಭ್ರಷ್ಟರ ವಿರುದ್ಧ ನಮ್ಮ ಹೋರಾಟದ ಗೆಲುವು. ಇದು ದಲಿತರ ಹಣಕ್ಕೆ ನ್ಯಾಯ ಬೇಕೆಂಬ ಆಗ್ರಹಕ್ಕೆ ಸಿಕ್ಕ ಜಯ. ಒಬ್ಬ ಸಚಿವನ ರಾಜೀನಾಮೆ ಕೊಡಿಸಿದರೆ ದಲಿತರಿಗೆ ನ್ಯಾಯ ಸಿಕ್ಕಂತೆ ಆಗುವುದಿಲ್ಲ. ನಾಗೇಂದ್ರ ರಾಜೀನಾಮೆ ಕೊಟ್ಟ ಮಾತ್ರಕ್ಕೆ ಕಾಂಗ್ರೆಸ್ ಪಾಪದ ಕೊಡ ಖಾಲಿಯಾಗುವುದಿಲ್ಲ ಎಂದರು ಹೇಳಿದ್ದಾರೆ.
ಈ ಹಗರಣದ ಮೂಲ ಸೂತ್ರದಾರರು ಯಾರು, ಯಾರ ಆದೇಶದ ಮೇರೆಗೆ ಹಣ ವರ್ಗಾವಣೆಯಾಯಿತು, ಯಾರ ಕಚೇರಿಯಿಂದ ನಿರ್ದೇಶನಗಳು ಬಂದವು, ಯಾರಿಗೆ ಈ ಹಣದ ಲೂಟಿಯಲ್ಲಿ ಲಾಭವಾಯಿತು, ಯಾರು ಆರೋಪಿಗಳನ್ನು ರಕ್ಷಿಸಿದರು ಹೀಗೆ ಪ್ರತಿಯೊಂದು ಪ್ರಶ್ನೆಗೂ ಉತ್ತರ ಬೇಕು. ದಲಿತರ ಹಣಕ್ಕೆ ಕೈ ಹಾಕಿದ ಪ್ರತಿಯೊಬ್ಬರೂ, ಹಗರಣಕ್ಕೆ ಸಹಕರಿಸಿದ ಪ್ರತಿಯೊಬ್ಬರೂ, ಆರೋಪಿಗಳನ್ನು ರಕ್ಷಿಸಿದ ಪ್ರತಿಯೊಬ್ಬರೂ ಕಾನೂನಿನ ಮುಂದೆ ನಿಲ್ಲಲೇಬೇಕು ಎಂದು ಒತ್ತಾಯಿಸಿದ್ದಾರೆ.


