ಕಲ್ಯಾಣ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ದಲಿತರ ಸರಣಿ ಕೊಲೆಗಳು ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ಕಿವಿಗೊಡುತ್ತಿಲ್ಲ ಎಂದು ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ಲಿಂಗಸಗೂರಿನಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು ನಿರಂತರವಾಗಿ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಬಳಿಕ ಇದೀಗ ಕಾಂಗ್ರೆಸ್ ನಾಯಕರು ಸ್ಥಳಕ್ಕೆ ಬರುತ್ತಿದ್ದಾರೆ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಯಲು ಶೌಚಮುಕ್ತ ಭಾರತಕ್ಕಾಗಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ನೀಡಿದೆ. ಆದರೆ,ಆ ಹಣವನ್ನು ದುರ್ಬಳಕೆ ಮಾಡಿಕೊಂಡು ಲೂಟಿ ಮಾಡಲಾಗಿದೆ ಎಂಬ ಆರೋಪಗಳಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚಬೇಕು. ಶೌಚಾಲಯದ ಅನುದಾನ ದುರ್ಬಳಕೆ ಕುರಿತು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ದಲಿತರು ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಆರೋಪಿಸಿದ ನಾರಾಯಣಸ್ವಾಮಿ, ಬಿಜೆಪಿ ಸದಾ ದಲಿತರು ಹಾಗೂ ಶೋಷಿತ ವರ್ಗಗಳ ಪರವಾಗಿ ನಿಲ್ಲುವ ಪಕ್ಷವಾಗಿದೆ ಎಂದು ಹೇಳಿದರು. ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು.


