ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಇಲ್ಲ. ಈ ಬಗ್ಗೆ ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಹಾರ ಧಾನ್ಯಗಳ ದಾಸ್ತಾನು ಇದೆ ಎಂದು ಸ್ಪಷ್ಟಪಡಿಸಿದರು.
ಆಹಾರ ಸಂಗ್ರಹಣೆ ಮಾಡುವವರು ಹಾಗೂ ಆಹಾರ ಧಾನ್ಯ ಸಾಗಾಟಗಾರರ ಮೇಲೆ ಗಮನ ಹರಿಸುವಂತೆ ಈಗಾಗಲೇ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಈ ಸಂಬಂಧ ಅಧಿಸೂಚನೆ ಕೂಡಾ ಹೊರಡಿಸಲಾಗಿದೆ ಎಂದು ಅವರು ವಿವರಿಸಿದರು.
ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿಯಲ್ಲಿದೆ. ಎರಡೂ ದೇಶಗಳು ಮಾತುಕತೆ ನಡೆಸುತ್ತಿವೆ. ಭಾರತ ಸ್ಪಷ್ಟ ನಿಯಮ ಹಾಗೂ ಷರತ್ತುಗಳ ಮೇಲೆ ಮಾತುಕತೆ ನಡೆಸಲಿದೆ. ಈ ಸಂದರ್ಭದಲ್ಲಿ ದೇಶ ಒಗ್ಗಟ್ಟಾಗಿರಬೇಕು ಎಂದು ಅವರು ಮನವಿ ಮಾಡಿದರು.
ಭಾರತ ಯಾವುದೇ ರೀತಿಯ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಯುದ್ಧವೆಂದು ಪರಿಗಣಿಸುವುದಾಗಿ ಘೋಷಿಸಿದೆ. ಈ ನಿಲುವಿನ ಮೇಲೆಯೇ ಮುಂದಿನ ಹೆಜ್ಜೆ ಇಡಲಾಗುತ್ತಿದೆ. ಈ ಬಗ್ಗೆ ಸರ್ಕಾರ ಹಾಗೂ ಸೇನೆ ಸ್ಪಷ್ಟವಾಗಿ ಜನರಿಗೆ ಮಾಹಿತಿ ನೀಡಲಿದೆ ಎಂದು ಪ್ರಹ್ಲಾದ್ ಜೋಷಿ ಹೇಳಿದರು.