Menu

ಕವಿ, ಸಾಹಿತಿ ಹೆಚ್.ಎಸ್. ವೆಂಕಟೇಶ್ ಮೂರ್ತಿ ಇನ್ನಿಲ್ಲ

ಕನ್ನಡದ ಪ್ರಮುಖ ಕವಿ, ಸಾಹಿತಿ, ನಾಟಕ ರಚನೆಕಾರರಾಗಿರುವ ಎಚ್.ಎಸ್ ವೆಂಕಟೇಶಮೂರ್ತಿ (ಹೆಚ್‌ಎಸ್‌ವಿ) ನಿಧನರಾದರು. 1944ರ ಜೂನ್‌ 23ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದ ಮಧ್ಯಮವರ್ಗದ ಕುಟುಂಬದಲ್ಲಿ ಅವರು ಜನಿಸಿದ್ದರು.

ಮೂವತ್ತು ವರ್ಷದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂಎ ಪದವಿ ಪಡೆದರು. ನಂತರ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಸೇರಿಕೊಂಡರು. ಕನ್ನಡದಲ್ಲಿ `ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. 2000ರಲ್ಲಿ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿದ್ದರು.

ಕನ್ನಡದಲ್ಲಿ 100ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಕೊಡುಗೆ ನೀಡಿದ್ದಾರೆ.ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನು ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ಋತುಸಂಹಾರ ಕಾವ್ಯಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪುರಸ್ಕಾರ ಲಭಿಸಿದೆ.

ಡಿಕೆ ಶಿವಕುಮಾರ್‌ ಸಂತಾಪ: ಭಾವಗೀತೆಗಳ ಮೂಲಕ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಹೆಚ್ಚಿಸಿದ ಹಿರಿಯ ಕವಿ ಎಚ್ಚೆಸ್ವಿ ಎಂದೇ ಜನಜನಿತರಾಗಿದ್ದ ಎಚ್.ಎಸ್. ವೆಂಕಟೇಶಮೂರ್ತಿ ನಿಧನದ ಸುದ್ದಿ ಕೇಳಿ ದುಃಖವಾಯಿತು. ಕಾದಂಬರಿ, ಕತೆ, ವಿಮರ್ಶೆ, ಕವನ, ಮಕ್ಕಳ ಸಾಹಿತ್ಯ, ಸಿನಿಮಾ ಸಾಹಿತ್ಯ, ರಂಗಭೂಮಿ ಹೀಗೆ ಎಲ್ಲಾ ಸಾಹಿತ್ಯ ಪ್ರಕಾರಗಳಲ್ಲೂ ಎಚ್ಚೆಸ್ವಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದ್ದರು.

ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ. ಅವರ ಅಪಾರ ಅಭಿಮಾನಿ ವರ್ಗಕ್ಕೆ, ಕುಟುಂಬಕ್ಕೆ, ಆಪ್ತರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಭಾವಗಳ ಕವಿಗೆ ಭಾವಪೂರ್ಣ ವಿದಾಯ‌ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ  ಸಂತಾಪ ಸಲ್ಲಿಸಿದ್ದಾರೆ.

Related Posts

Leave a Reply

Your email address will not be published. Required fields are marked *