ಬೆಂಗಳೂರು: ವೃಷಭಾವತಿ ವ್ಯಾಲಿ, ಹೆಚ್. ಎನ್ ವ್ಯಾಲಿ 2 ನೇ ಹಂತದ ಯೋಜನೆ, ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್, ಏತ ನೀರಾವರಿ ಯೋಜನೆ, ನಿಷ್ಕ್ರೀಯ ಯೋಜನೆಗಳ ಪುನರುಜ್ಜೀವನಕ್ಕೆ ಆದ್ಯತೆ ನೀಡಿ, ರಾಜ್ಯದ ಅಂತರ್ಜಲ ಹೆಚ್ಚಳಕ್ಕೆ 2000 ಕೋಟಿ ರೂಪಾಯಿಗಳ ಅನುದಾನದ ಮೂಲಕ ಒತ್ತು ನೀಡುವುದು. ಹಾಗೆಯೇ, ಕೋಲಾರ, ರಾಮನಗರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೊಸ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಸ್ಥಾಪನೆಗೆ ಅನುದಾನ ಒದಗಿಸುವ ಮೂಲಕ ವೈಜ್ಞಾನಿಕ ಮನೋಭಾವಕ್ಕೆ ಪುಷ್ಠಿ ನೀಡುವ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ ಕ್ರಾಂತಿಕಾರಿ ಆಯವ್ಯಯವನ್ನ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಪ್ರತಿಕ್ರಿಯಿಸಿದ್ದಾರೆ.
ಸಾರ್ವತ್ರಿಕ ಮೂಲ ಆಧಾಯ ಪರಿಕಲ್ಪನೆಯ ಮೂಲಕ ಕರ್ನಾಟಕ ಅಭಿವೃದ್ದಿಯ ಮಾದರಿಯನ್ನು ರೂಪಿಸಿರುವ ಖ್ಯಾತಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು. ಪಂಚ ಗ್ಯಾರಂಟಿಗಳು ಸೇರಿದಂತೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸುವ ಮೂಲಕ ಕರ್ನಾಟಕ ಮಾದರಿ ಇಂದು ದೇಶವ್ಯಾಪಿಯಾಗಿದೆ. ಬಸವಣ್ಣವರ ಆಶಯದಂತೆ ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಈ ಬಾರಿ ಬಜೆಟ್ ನಲ್ಲಿ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಿದ್ದು, ಇಡೀ ದೇಶದಲ್ಲೆ ನಮ್ಮ ಸರಕಾರ ಮಾದರಿಯಾಗಿ ಹೊರಹೊಮ್ಮಿದೆ. ಅಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ನುಡಿದಂತೆ 5 ಸಾವಿರ ಕೋಟಿಯ ಅನುದಾನವನ್ನು ಈ ಬಾರಿಯೂ ನೀಡಿದ್ದಾರೆ.
ಯಾವುದೇ ಮಧ್ಯವರ್ತಿಗಳಿಲ್ಲದೆ 1 ಲಕ್ಷ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತವನ್ನು ನೇರವಾಗಿ ಫಲಾನುಭವಿಗಳಿಗೆ ವರ್ಗಾವಣೆ ಮಾಡಲಾಗಿದೆ. ಪ್ರಾದೇಶಿಕ ಅಸಮಾನತೆಯ ನಿವಾರಣೆಯ ಜೊತೆಯಲ್ಲೇ, ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ಸುಗಮ ಸಾರಿಗೆ ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ ನಿಭಾಯಿಸಲು ಒತ್ತು ನೀಡುವ ಆಯವ್ಯವನ್ನು ಇಂದು ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ನಡುವೆಯೂ ರಾಜ್ಯ ಅರ್ಥಿಕತೆ ಬೆಳವಣಿಗೆಯ ದರ ಶೇಕಡಾ 7.4 ರಷ್ಟು ದಾಖಲಾಗಿದೆ. ರಾಜ್ಯವು ಆರ್ಥಿಕ ಪ್ರಗತಿಯಲ್ಲಿ ಮುಂದುವರೆಯುತ್ತಿರುವುದ ಸ್ಪಷ್ಟವಾಗಿದೆ.
ಸಣ್ಣ ನೀರಾವರಿ ಇಲಾಖೆಗೆ ಹೆಚ್ಚಿನ ಅನುದಾನ:
ರಾಜ್ಯದ ಅಂತರ್ಜಲ ಅಭಿವೃದ್ದಿಗೆ, ರೈತರಿಗೆ ನೀರಾವರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಸಣ್ಣ ನೀರಾವರಿ ಅಂತರ್ಜಲ ಅಭಿವೃದ್ದಿ ಇಲಾಖೆಗೆ ಈ ಬಾರಿ ಹೆಚ್ಚಿನ ಅನುದಾನ ಒದಗಿಸಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳು ಈ ಬಾರಿ ಹೊಸ ಯೋಜನೆಗಳಿಗಾಗಿ 2000 ಕೋಟಿ ರೂಪಾಯಿ ಅನುದಾನ ಒದಗಿಸಿದ್ದಾರೆ. ಈ ಮೂಲಕ ರಾಜ್ಯದ ಅಂತರ್ಜಲ ಅಭಿವೃದ್ದಿಗೆ ಅನುವು ಮಾಡಿಕೊಡುವಂತಹ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.