Menu

ಬಳ್ಳಾರಿ ಘಟನೆ ನ್ಯಾಯಾಂಗ ತನಿಖೆ ನಡೆಸಲು ಆರ್.ಅಶೋಕ್ ಆಗ್ರಹ

ಬೆಂಗಳೂರು: ಮಾಜಿ ಸಚಿವ ಮತ್ತು ಶಾಸಕ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಅವರು ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಮಾಜಿ ಸಚಿವ ಮತ್ತು ಶಾಸಕ ಜನಾರ್ಧನ ರೆಡ್ಡಿ ಬೆಂಬಲಿಗರ ಮನೆಗೆ ಅಕ್ರಮವಾಗಿ ನುಗ್ಗಿದ ಕಾಂಗ್ರೆಸ್ಸಿನವರನ್ನು ಕೂಡಲೇ ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಬಳ್ಳಾರಿ ಘಟನಾವಳಿ, ಒಂದು ಸಾವಿಗೆ ಶಾಸಕ ಭರತ್ ರೆಡ್ಡಿಯೇ ಕಾರಣ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಮಾಜಿ ಸಚಿವ ಮತ್ತು ಶಾಸಕ ಜನಾರ್ದನ ರೆಡ್ಡಿ ಮುಗಿಸಲು ಕಾಂಗ್ರೆಸ್ಸಿನವರು ತೀರ್ಮಾನಿಸಿದ್ದರು ಎಂದು ಆರೋಪಿಸಿದರು.

ಬಳ್ಳಾರಿಯಲ್ಲಿ ಕಾಂಗ್ರೆಸ್ಸಿನ ಗೂಂಡಾಗಳು ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರ ಮೇಲೆ ಗುಂಡಿನ ದಾಳಿ ಮಾಡಿರುವುದು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಹೊಸ ವರ್ಷಾಚರಣೆ ವೇಳೆ ಮುಖ್ಯಮಂತ್ರಿಗಳು ದುರ್ಘಟನೆ ನಡೆಯದಂತೆ ಪೊಲೀಸರು ನೋಡಲಿದ್ದಾರೆಂದು ಭರವಸೆಯ ಮಾತಾಡಿದ್ದಾರೆ. ಅವರು ಹೇಳಿದ ಒಂದೇ ದಿನಕ್ಕೆ ಬಳ್ಳಾರಿಯಲ್ಲಿ ಗುಂಡುಗಳ ದಾಳಿ (ಫೈರಿಂಗ್) ನಡೆದಿದೆ. ಇದು ರಾಜ್ಯದ ಕಾನೂನು- ಸುವ್ಯವಸ್ಥೆ ಕುಸಿತಕ್ಕೆ ಕೈಗನ್ನಡಿ ಎಂದರು.

ಒಂದೆಡೆ ಪೊಲೀಸರು ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಆಂಧ್ರ ಮಾದರಿಯ ರಕ್ತ ಚರಿತ್ರೆ ಕರ್ನಾಟಕಕ್ಕೂ ಕಾಲಿಟ್ಟಿದೆ ಎಂದು ಕಳವಳ ವ್ಯಕ್ತಪಡಿಸಿದರು. ರಾಜಕೀಯವಾಗಿ ಗುಂಡು ಹಾರಿಸುವ ಸಂಸ್ಕøತಿ ಕರ್ನಾಟಕದಲ್ಲಿ ಇರಲಿಲ್ಲ; ಇವತ್ತು ಅದಕ್ಕೂ ನಾಂದಿ ಹಾಡಿದ್ದಾರೆ ಎಂದು ತಿಳಿಸಿದರು.

ಜನಾರ್ದನ ರೆಡ್ಡಿ ಕಾಂಪೌಂಡ್ ಒಳಗೆ ಬಂದು ಫ್ಲೆಕ್ಸ್ ಹಾಕಿದ್ದಾರೆ. ಅದಾದ ಬಳಿಕ ಜನಾರ್ದನ ರೆಡ್ಡಿ ಮನೆಯವರು ದೂರು ನೀಡಿದ್ದಾರೆ. ಪೊಲೀಸರು ಬಂದು ತೆರವುಗೊಳಿಸಿದ್ದಾರೆ. ನಂತರ ಶಾಸಕ ಸತೀಶ್ ರೆಡ್ಡಿ ಬೆಂಬಲಿಗರು ಬಂದು ರಸ್ತೆ ಮೇಲೆ ಕಾಲ ಮೇಲೆ ಕಾಲು ಹಾಕಿ ಕುಳಿತು ಗೇಟ್ ನುಗ್ಗಿ ಫ್ಲೆಕ್ಸ್ ಕಟ್ಟಿಸಿದ್ದಾರೆ ಎಂದು ದೂರಿದರು. ಇದರಲ್ಲಿ ಜನಾರ್ದನ ರೆಡ್ಡಿ ತಪ್ಪೇನಿದೆ ಎಂದು ಕೇಳಿದರು.

ರಕ್ತ ಚರಿತ್ರೆಯಲ್ಲೇ 2026ರ ಪ್ರಾರಂಭವಾಗಿದೆ. ಆಂಧ್ರ ಮಾದರಿಗೆ ಹೋಗುವ ಸಂದೇಶವನ್ನು ಈ ದುರುಳ ಸರಕಾರವು ಕೊಟ್ಟಿದೆ ಎಂದು ಟೀಕಿಸಿದರು. ಈ ಘಟನೆ ಆದಾಗ ಜನಾರ್ದನ ರೆಡ್ಡಿ ಮನೆಯಲ್ಲಿ ಇರಲಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

Related Posts

Leave a Reply

Your email address will not be published. Required fields are marked *