ರೇಡಿಯೋ ಜಾಕಿಯಾಗಿದ್ದ ಮುಂಬೈನ ಮಹಿಳೆ ಮನಿಷಾ ಎಂಬವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್ನ ಫ್ಲಾಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ನೋಟ್ ಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈನಲ್ಲಿ ರೇಡಿಯೋ ಜಾಕಿಯಾಗಿದ್ದ ಮನೀಷಾ 2024ರಲ್ಲಿ ವಿಚ್ಛೇದನ ಪಡೆದಿದ್ದರು. ಕಳೆದ ಏಪ್ರಿಲ್ನಲ್ಲಿ ಬೆಂಗಳೂರಿಗೆ ಬಂದಿದ್ದು, ಮಾನ್ಯತಾ ಟೆಕ್ ಪಾರ್ಕ್ ಬಳಿ ಹೊಸದಾಗಿ ಫ್ಲಾಟ್ ಖರೀದಿಸಿ ಒಂಟಿಯಾಗಿ ವಾಸಿಸುತ್ತಿದ್ದರು. ಸಂಬಂಧಿಕರು ಫೋನ್ ಮಾಡಿದಾಗ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಮನೀಷಾ ಡೆತ್ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ಹರ್ಷವರ್ಧನ್ ಸಿಂಗ್ ಬನ್ಸಾಲ್ ಕಾರಣ ಎಂದು ಉಲ್ಲೇಖಿಸಿದ್ದಾರೆ. ನಾನು ಮತ್ತು ಹರ್ಷವರ್ಧನ್ ಸಿಂಗ್ ರಿಲೇಷನ್ಶಿಪ್ನಲ್ಲಿದ್ದೆವು. ಇದು ಆತನ ಮನೆಯವರಿಗೂ ತಿಳಿದಿತ್ತು. ಆದರೆ ಆತ ಪ್ರತಿದಿನ ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದ. ತಡೆಯಲಾರದೆ ಮನನೊಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಡೆತ್ನೋಟ್ ಹಾಗೂ ಮನೀಷಾ ಮೊಬೈಲ್ ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


