ಸೆಪ್ಟೆಂಬರ್ 27ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಕರಾವಳಿ ಹಾಗೂ ಒಳನಾಡು ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ 120 ಮಿಲಿ ಮೀಟರ್ನಷ್ಟು ಮಳೆ ಆಗಲಿದೆ. ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುವ ಕಾರಣಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆಪ್ಟಂಬರ್ 27, 28ರಂದು ಎರಡು ದಿನ ಭಾರೀ ಮಳೆ ಆಗಲಿದೆ. ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮೂರು ದಿನ, ವಿಜಯಪುರ, ಬೀದರ್ ಮತ್ತು ಬಾಗಲಕೋಟೆಯಲ್ಲಿ ಎರಡು ದಿನ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ. ಈ ವೇಳೆ ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ ತಜ್ಞರು ಹೇಳಿದ್ದಾರೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು,ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಗದಗ, ಧಾರವಾಡ, ಬೆಳಗಾವಿಯಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚು ಮಳೆಯಾಗುತ್ತಿದೆ. ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗುರ ಮಳೆ, ಮೋಡ ಕವಿದ ವಾತಾವರಣ ಜೊತೆಗೆ ತಂಪು ಗಾಳಿ ಬೀಸಲಿದೆ. ಕನಿಷ್ಠ ತಾಪಮಾನ 20 ಹಾಗೂ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಬಹುದು.