ನಾಯಕ ರಜತ್ ಪಟಿದಾರ್ ನೇತೃತ್ವದಲ್ಲಿ ಬ್ಯಾಟ್ಸ್ ಮನ್ ಗಳು ಸಮಯೋಚಿತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 197 ರನ್ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ.
ಚೆನ್ನೈನ ಚೆಪಾಕ್ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್ ಪೇರಿಸಿತು.
ಆರ್ ಸಿಬಿಗೆ ಫಿಲ್ ಸಾಲ್ಟ್ 16 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ನೊಂದಿಗೆ 32 ರನ್ ಗಳಿಸಿ ಸ್ಫೋಟಕ ಆರಂಭ ನೀಡಿ ನಿರ್ಗಮಿಸಿದರು. ದೇವದತ್ ಪಡಿಕಲ್ 14 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 27 ರನ್ ಗಳಿಸಿದರು.
ಒಂದೆಡೆ ವಿಕೆಟ್ ಉಳಿಸಿಕೊಳ್ಳಲು ನಿಧಾನವಾಗಿ ಆಡುತ್ತಿದ್ದ ವಿರಾಟ್ ಕೊಹ್ಲಿ 30 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 31 ರನ್ ಬಾರಿಸಿ ಔಟಾದರು. ಈ ಹಂತದಲ್ಲಿ ಆರ್ ಸಿಬಿ 117 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು.
ಈ ಹಂತದಲ್ಲಿ ಚೆನ್ನೈ ಬೌಲರ್ ಗಳು ತಿರುಗೇಟು ನೀಡಿದ್ದರಿಂದ ತಂಡ ಮಧ್ಯಮ ಕ್ರಮಾಂಕದಲ್ಲಿ ಕುಸಿತ ಅನುಭವಿಸಿದ್ದರಿಂದ ರನ್ ವೇಗದಲ್ಲಿ ಕುಸಿತ ಕಂಡಿತು. ಈ ಹಂತದಲ್ಲಿ ನಾಯಕ ರಜತ್ ಪಟಿದಾರ್ 32 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ 51 ರನ್ ಬಾರಿಸಿ ಅರ್ಧಶತಕದ ಗೌರವದೊಂದಿಗೆ ನಿರ್ಗಮಿಸಿದರು. ಕೊನೆಯ ಹಂತದಲ್ಲಿ ಟಿಮ್ ಡೇವಿಡ್ ಕೊನೆಯ ಓವರ್ ನಲ್ಲಿ ಸತತ 3 ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ಸಮೀಪ ತಂದು ನಿಲ್ಲಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ನೂರ್ ಅಹ್ಮದ್ 3 ವಿಕೆಟ್ ಪಡೆದು ಮಿಂಚಿದರೆ, ಮಹೇಶ ಪತಿರಾಣ 2 ವಿಕೆಟ್ ಗಳಿಸಿದರು.