ಅಹಮದಾಬಾದ್: ಆರಂಭಿಕ ಸಾಯಿ ಸುದರ್ಶನ್ ಅವರ ಸಿಡಿಲಬ್ಬರದ ಅರ್ಧಶತಕ ಮತ್ತು ಪ್ರಸಿದ್ಧ ಕೃಷ್ಣ ಅವರ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 58 ರನ್ ನಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದೆ.
ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 216 ರನ್ ಕಲೆಹಾಕಿತು. ಕಠಿಣ ಗುರಿ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ 19.1 ಓವರ್ ಗಳಲ್ಲಿ 159 ರನ್ ಗೆ ಆಲೌಟಾಯಿತು.
ಕಠಿಣ ಗುರಿ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ ಆರಂಭದಿಂದಲೇ ಸತತವಾಗಿ ವಿಕೆಟ್ ಕಳೆದುಕೊಂಡು ಸೋಲಿನ ಹಾದಿ ಹಿಡಿಯಿತು. ನಾಯಕ ಸಂಜು ಸ್ಯಾಮ್ಸನ್ 28 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 41 ರನ್ ಬಾರಿಸಿ ಔಟಾದರೆ, ಶಿರ್ಮೊನ್ ಹೆಟ್ಮೇಯರ್ 32 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ 52 ರನ್ ಗಳಿಸಿ ಔಟಾದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಆರಂಭದಲ್ಲೇ ನಾಯಕ ಶುಭಮನ್ ಗಿಲ್ (2) ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಆದರೆ ಸಾಯಿ ಸುದರ್ಶನ್ 53 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ 82 ರನ್ ಚಚ್ಚಿದರು.
ಮಧ್ಯಮ ಕ್ರಮಾಂಕದಲ್ಲಿ ಜೋಸ್ ಬಟ್ಲರ್ (36) ಮತ್ತು ಶಾರೂಖ್ ಖಾನ್ (36) ರಾಹುಲ್ ತೆವಾಟಿಯಾ (ಅಜೇಯ24) ಉಪಯುಕ್ತ ಕಾಣಿಕೆ ನೀಡಿ ತಂಡದ ಮೊತ್ತ 200ರ ಗಡಿ ದಾಟಲು ನೆರವಾದರು.