Menu

ಉಕ್ಕು ವಲಯ ಅಭಿವೃದ್ಧಿ: ಒಡಿಶಾ ಸಿಎಂ ಜತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ

dk shivakumar

ನವದೆಹಲಿ: ಒಡಿಶಾದ ರೊರ್ಕೆಲಾ ಉಕ್ಕು ಸ್ಥಾವರದ ಅಭಿವೃದ್ಧಿ, ಉಕ್ಕು ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗವಕಾಶ ಸೃಷ್ಟಿ ಸೇರಿದಂತೆ ಹಲವಾರು ಮಹತ್ವದ ವಿಷಯಗಳ ಬಗ್ಗೆ ಒಡಿಶಾದ ಮುಖ್ಯಮಂತ್ರಿ ಮೋಹನ್ ಚರಣ್ ಮಾಹಜಿ, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ನವದೆಹಲಿಯ ತಮ್ಮ ನಿವಾಸಕ್ಕೆ ಆಗಮಿಸಿದ ಒಡಿಶಾ ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡ ಕೇಂದ್ರ ಸಚಿವರು, ಆ ರಾಜ್ಯದ ಉಕ್ಕು ಕ್ಷೇತ್ರದ ಆಮೂಲಾಗ್ರ ಅಭಿವೃದ್ಧಿ ಮತ್ತು ವಿವಿಧ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ವಿಕಸಿತ ಒಡಿಶಾ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಉಕ್ಕು ಕ್ಷೇತ್ರ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಕಾರ ಅತ್ಯಗತ್ಯವಾಗಿದೆ ಎಂದು ಮಾಹಜಿ ಅವರು ಕೋರಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರದ ಸಚಿವರು; ಉಕ್ಕು ಉತ್ಪಾದನೆಯಲ್ಲಿ ಒಡಿಶಾ ಮಹತ್ವದ ಕೊಡುಗೆ ನೀಡುತ್ತಿದೆ. ಈಗಾಗಲೇ ಭಾರತೀಯ ಉಕ್ಕು ಪ್ರಾಧಿಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೂರ್ಕೆಲಾ ಉಕ್ಕು ಸ್ಥಾವರ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಬದ್ಧರಾಗಿದ್ದೇವೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರವು ಸದಾ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು.

ಭಾರತೀಯ ಉಕ್ಕು ಕ್ಷೇತ್ರದ ಪರಿವರ್ತನಾತ್ಮಕ ಅಭಿವೃದ್ಧಿಗೆ ನಾಯಕತ್ವ ವಹಿಸುವ ಶಕ್ತಿ ಒಡಿಶಾಗೆ ಇದೆ ಎಂದು ಹೇಳಿದ ಕೇಂದ್ರ ಸಚಿವರು; ರಾಜ್ಯ ಸರ್ಕಾರದೊಂದಿಗೆ ಮೂಲಸೌಕರ್ಯ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಇನ್ನಿತರ ಕ್ಷೇತ್ರಗಳಲ್ಲಿ ವೇಗವಾಗಿ ಬೆಳೆಯುವ ನಿಟ್ಟಿನಲ್ಲಿ ಕೇಂದ್ರವು ಸಹಕಾರ ನೀಡುತ್ತದೆ ಎಂದು ತಿಳಿಸಿದರು.

ಕೈಗಾರಿಕಾ ಬೆಳವಣಿಗೆ, ಖನಿಜ ಅಭಿವೃದ್ಧಿ ಮತ್ತು ಉಕ್ಕಿನ ಶ್ರೇಷ್ಠತೆಯಲ್ಲಿ ಒಡಿಶಾವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಿಗೆ ಸ್ಪಷ್ಟ ಭರವಸೆ ನೀಡಿದ ಸಚಿವರು; ಆತ್ಮನಿರ್ಭರ ಭಾರತ, 2047ರ ವೇಳೆಗೆ ವಿಕಸಿತ ಭಾರತ ಸಾಕಾರ ಹಾಗೂ 2030ರ ವೇಳೆಗೆ ಪ್ರಧಾನಿ ಮೋದಿಯವರ ಗುರಿಯಂತೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಒಡಿಶಾ ಸರ್ಕಾರದ ಜತೆ ನಿಕಟವಾಗಿ ಕೆಲಸ ಮಾಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯ ಹಾಗೂ ಒಡಿಶಾ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ತಿತರಿದ್ದರು.

Related Posts

Leave a Reply

Your email address will not be published. Required fields are marked *