ವೇತನ ಪರಿಷ್ಕರಣೆ ಸೇರಿ ನಾನಾ ಬೇಡಿಕೆಗಳಿಗೆ ಆಗ್ರಹಿಸಿ ಆ.5 ರಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೇಳಿದ್ದು, ಮುಂಜಾಗ್ರತಾ ಕ್ರಮವಾಗಿ ಸಾರಿಗೆ ಇಲಾಖೆಯು ಆ.4ರಿಂದಲೇ ಅನ್ವಯವಾಗುವಂತೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆ ರದ್ದುಗೊಳಿಸಿ ಸುತ್ತೋಲೆ ಹೊರಡಿಸಿದೆ.
ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಉಳಿಯದ ಯಾವುದೇ ರೀತಿಯ ರಜೆಗಳನ್ನು ಮಂಜೂರು ಮಾಡದಂತೆ ಆಯಾ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದೆ, ಅಗತ್ಯಬಿದ್ದರೆ ವಾರದ ರಜೆ ಕೂಡ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಿದೆ. ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರಾಗುವ ನೌಕರರ ವೇತನವನ್ನೂ ಕಡಿತಗೊಳಿಸುವುದಾಗಿ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ
ಆಗಸ್ಟ್ 4ರಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಅನುಸೂಚಿಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಆಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದು. ಅನಿವಾರ್ಯ ಸಂದರ್ಭ ಹೊರತುಪಡಿಸಿ ಯಾವುದೇ ರಜೆಯನ್ನು ಮಂಜೂರು ಮಾಡದಿರುವುದು, ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ʻಕೆಲಸ ಮಾಡದಿದ್ದಾಗ ವೇತನವಿಲ್ಲʼ ಎಂಬ ತತ್ವದ ಪ್ರಕಾರ ಕ್ರಮ ಕೈಗೊಳ್ಳುವುದು. ಈ ಸೂಚನೆಗಳು ವಾರದ ರಜೆ ಮತ್ತು ದೀರ್ಘಾವಧಿ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ. ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನೂ ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವುದು.
* ಆ.4 ಮತ್ತು ನಂತರದ ಮುಷ್ಕರದ ದಿನಗಳಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ಪಟ್ಟಿಯಲ್ಲಿ ದಿನವಹಿ/ ಘಟಕವಾರು/ ವರ್ಗಾವಾರು ಸಿದ್ಧಪಡಿಸಿ, ಕೆಲಸ ಮಾಡದಿದ್ದ ದಿನಗಳ ವೇತನ ಕಡಿತಗೊಳಿಸುವುದು. ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದು ಸೇರಿದಂತೆ ನಾಲ್ಕು ನಿಗಮಗಳಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.