ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಹಿಂಸೆಯ ಪ್ರಯೋಗ ಮಾಡಿದರೂ ಮಂಗಳವಾರವೂ ಪ್ರತಿಭಟನೆ ಮುಂದುವರಿದಿದೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಸೋಮವಾರ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಾಗೂ ಗುರುತು ಖಚಿತವಿಲ್ಲದ ಹಲವರು ವಿದ್ಯಾರ್ಥಿಗಳ ಮೇಲೆ ಮನ ಬಂದದಂತೆ ದಾಳಿ, ಹಿಂಸಾಚಾರ ನಡೆಸಿದ್ದು, ಹಲವರು ಆಸ್ಪತ್ರಗೆ ದಾಖಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.
ಪೊಲೀಸರು ಸೋಮವಾರ ರಾತ್ರಿ ಸ್ಥಳದಲ್ಲಿದ್ದ ಟೆಂಟ್, ವೇದಿಕೆ ಸೇರಿ ಇತರ ವ್ಯವಸ್ಥೆಗಳನ್ನು ತೆರವುಗೊಳಿಸಿದ್ದರೂ ಮಂಗಳವಾ ಬೆಳಗ್ಗೆಯೇ ಪ್ರತಿಭಟನಾಕಾರರು ಜಮಾಯಿಸಿ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ದೆಹಲಿ ಪೊಲೀಸರು ಹಾಗೂ ಕ್ಷಿಪ್ರ ಕಾರ್ಯಪಡೆ ಪ್ರಮುಖ ಪ್ರದೇಶಗಳಲ್ಲಿ ನಿಯೋಜನೆಗೊಂಡಿದ್ದು, ಪಾರ್ಲಿಮೆಂಟ್ ಸುತ್ತ ಕಟ್ಟೆಚ್ಚರ ಕೈಗೊಳ್ಳಲಾಗಿದೆ.
ಆರೋಗ್ಯ ಸಚಿವ ಜೆಪಿ ನಡ್ಡಾ ಸಿಜೆಪಿ ಮುಖಂಡರ ಜೊತೆ ಮಾತುಕತೆ ನಡೆಸಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಲ್ಳುವ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಉಪವಾಸ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಯುವಕರ ಮೇಲೆ ನಡೆದ ಪೊಲೀಸ್ ಕ್ರಮ ನನಗೆ ತೀವ್ರ ನೋವು ತಂದಿದೆ ಎಂದು ವಾಂಗ್ಚುಕ್ ತಿಳಿಸಿದ್ದಾರೆ.
ನಮ್ಮ ಬೇಡಿಕೆಗಳು ಈಡೇರುವವರೆಗೆ ಚಲೊ ಸಂಸದ್ ಪ್ರತಿಭಟನೆ ಮುಂದುವರಿಯಲಿದೆ, ಈ ಹೋರಾಟ ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ, ವಿದ್ಯಾರ್ಥಿಗಳು ಮತ್ತು ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ.


