ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗಿನ ಐದು ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಹಲವು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಮುಂದೂಡಿಕೆಯಾಗುತ್ತಲೇ ಇದೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿತ್ತು.
ವಿಚಾರಣೆ ವೇಳೆ, ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿ, ಈಗಾಗಲೇ ಮೀಸಲಾತಿಯ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು. ಫೆಬ್ರವರಿ 20ರೊಳಗೆ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ಕೋರ್ಟ್ ಸೂಚನೆ ನೀಡಿದೆ.
ಮಾರ್ಚ್ 16ರೊಳಗೆ ಮತದಾರರ ಪಟ್ಟಿ ಅಂತಿಮಗೊಳ್ಳಲಿದ್ದು, ಮಾರ್ಚ್ನಲ್ಲಿ ಎಸ್ಎಸ್ಎಲ್ಸಿ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಮೇ 26ರೊಳಗೆ ಚುನಾವಣಾ ದಿನಾಂಕ ಘೋಷಿಸಿ, ಜೂನ್ ತಿಂಗಳೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆಎನ್ ಫಣೀಂದ್ರ ಕೋರ್ಟ್ಗೆ ತಿಳಿಸಿದ್ದಾರೆ.


