ನೀಟ್ ಅಕ್ರಮಗಳ ತನಿಖೆಗೆ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಶತ್ರುಗಳಂತೆ ಕಾಣುತ್ತಿರುವುದಾಗಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಮೋದಿ ಸರ್ಕಾರ ದೇಶದ ಶತ್ರುಗಳು ಎಂಬಂತೆ ನಡೆಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದು, ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದಾರೆ.
ಜುಲೈ 20 ರಂದು ದೆಹಲಿ ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿ, ಅಶ್ರುವಾಯು ದಾಳಿ ನಡೆಸಿದೆ. ಕಲ್ಲು ತೂರಿ
ಹಿಂಸಾತ್ಮಕವಾಗಿ ಹತ್ತಿಕ್ಕಲು ಯತ್ನಿಸಿವೆ. ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗಳನ್ನೂ ಬಿಡದೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.
ಆ ವೀಡಿಯೊಗಳು ಪ್ರತಿಯೊಬ್ಬರ ಮನಸ್ಸನ್ನು ಕಲಕಿವೆ. ಮೋದಿ ಸರ್ಕಾರವು ಸಾರ್ವಜನಿಕ ಶಿಕ್ಷಣದಿಂದ ಹಿಂದೆ ಸರಿಯುತ್ತಿದೆ. ಶಾಲಾ ಶಿಕ್ಷಣದ ಬಜೆಟ್ 50% ಹಾಗೂ ಉನ್ನತ ಶಿಕ್ಷಣದ ಬಜೆಟ್ 33% ಕಡಿತಗೊಳಿಸಲಾಗಿದೆ. 12 ವರ್ಷಗಳಲ್ಲಿ ಸರ್ಕಾರ 1 ಲಕ್ಷ ಸರ್ಕಾರಿ ಶಾಲೆಗಳನ್ನು ಮುಚ್ಚಿ 43000 ಖಾಸಗಿ ಶಾಲೆಗಳಿಗೆ ಉತ್ತೇಜನ ನೀಡಿದೆ ಎಂದು ಅಂಕಿಅಂಶ ಸಹಿತ ವಾಗ್ದಾಳಿ ನಡೆಸಿದ್ದಾರೆ.
ಪರೀಕ್ಷಾ ಪದ್ಧತಿ ಮತ್ತು ಎನ್ಟಿಎ ಸುಧಾರಣೆಗೆ ಸಂಬಂಧಿಸಿದ ಸಂಸದೀಯ ಸಮಿತಿಯ ಶಿಫಾರಸುಗಳನ್ನು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿರಸ್ಕರಿಸಿದ್ದಾರೆ. ಇಷ್ಟೆಲ್ಲಾ ಗೊಂದಲಗಳು ಹಾಗೂ ವೈಫಲ್ಯಗಳು ಸಂಭವಿಸಿದರೂ ಅವರು ರಾಜೀನಾಮೆ ನೀಡದಿರುವುದು ವಿದ್ಯಾರ್ಥಿ ವಿಯಾರ್ಥಿಗಳ ಆಕ್ರೋಶ ಹೆಚ್ಚಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ.


