ಯುಪಿಐ ವಹಿವಾಟಿನ ಮೇಲೆ ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಇಡೀ ದೇಶ ಹೋರಾಟ ನಡೆಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಯುಪಿಐ ವಹಿವಾಟಿನ ಮೇಲೆ ತೆರಿಗೆ ವಿಧಿಸಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುವುದೇ ಎಂದು ಕೇಳಿದಾಗ, ಇದು ಕೇವಲ ಕಾಂಗ್ರೆಸ್ ಪಕ್ಷದ ವಿಚಾರವಲ್ಲ. ಇಡೀ ದೇಶದ ಸಮಸ್ಯೆಯಾಗಿದೆ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷವಾಗಿದ್ದು, ಜನಸಾಮಾನ್ಯರ ಹಿತ ಕಾಯಲು ಹೋರಾಟ ಮಾಡಲಿದೆ. ಹೀಗಾಗಿ ನಮ್ಮ ಪ್ರಧಾನ ಕಾರ್ಯದರ್ಶಿಗಳು ದೇಶದ ಜನರ ಪರವಾಗಿ ಮಾಧ್ಯಮಗೋಷ್ಠಿ ನಡೆಸಿ ದೇಶದ ಜನರಿಗೆ ಸಂದೇಶ ರವಾನಿಸಿದ್ದಾರೆ ಎಂದು ತಿಳಿಸಿದರು.
ಯುಪಿಐ ಪಾವತಿಗಳ ಮೇಲೆ ವ್ಯಾಪಾರಿ ರಿಯಾಯಿತಿ ದರ (ಎಂಡಿಆರ್) ಪರಿಚಯಿಸುವಿಕೆಯು ವಿದೇಶಿ ಪ್ರಭಾವದಿಂದ ಕೂಡಿದೆ ಎಂಬ ಪ್ರತಿಪಕ್ಷಗಳ ಟೀಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಹಣಕಾಸು ಸಚಿವಾಲಯವು ಭಾರತದ ಯುಪಿಐ ನೀತಿ ನಿರ್ಧಾರಗಳನ್ನು ಸ್ವತಂತ್ರವಾಗಿ ತೆಗೆದುಕೊಳ್ಳಲಾಗಿದೆ ಮತ್ತು ಅದು ಗ್ರಾಹಕರಿಗೆ ಮುಕ್ತವಾಗಿ ಮುಂದುವರಿಯುತ್ತದೆ ಎಂದು ಹೇಳಿದೆ. ಯುಪಿಐ ವಹಿವಾಟುಗಳ ಮೇಲೆ ವಿಧಿಸಲಾಗಿರುವ ಶುಲ್ಕವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸಮಾಧಾನಪಡಿಸುವ ಗುರಿಯನ್ನು ಹೊಂದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಯುಪಿಐ ವಹಿವಾಟಿಗೆ ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮೋಸ ಎಂದು ಕಿಡಿಕಾರಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಇದು ದೇಶದ ಜನರಿಗೆ ಮಾಡಿದ ಮೋಸ ಎಂದು ಕಿಡಿ ಕಾರಿದ್ದಾರೆ. ಬಡವರು, ಮಧ್ಯಮವರ್ಗ ಸೇರಿ ಎಲ್ಲರ ಮೇಲೂ ಇದರ ಪರಿಣಾಮ ಆಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಅಮೆರಿಕ ಕಂಪನಿಗಳಿಗೆ ಸರೆಂಡರ್ ಆಗಿದೆ ಎಂದಿದ್ದಾರೆ.


