ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೊಪ್ಪಳ ಜಿ್ಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಕಡಿಮೆ ಅಂತರದಲ್ಲಿ ಸೋತಿದ್ದರೂ ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಜನತೆಗೆ ಧನ್ಯವಾದಗಳನ್ನು ತಿಳಿಸಿದರು.
ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತಂತೆ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಲ್ಡೋಟಾ ಕಾರ್ಖಾನೆಯ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಎಂಎಸ್ ಪಿ ಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ಎಂದು ಪ್ರಶ್ನಿಸಿದರು.
ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು. ಗ್ಯಾರಂಟಿಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ , ಗ್ಯಾರಂಟಿಗಳನ್ನು ಸಮರ್ಪಕವಾಗಿ ತಲುಪಿಸಲಾಗುತ್ತಿದೆ ಎಂದು ಹೇಳಿದರು.
ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.