ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಿರಿಯೂರಿನ ಐಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ ಉರುಳಿ, ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಒಬ್ಬ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದ್ದು, ಎಲ್ಲ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನ ಮುಂಭಾಗ ಜಖಂ ಆಗಿದೆ.
ಬಸ್ನಲ್ಲಿ 53 ಜನರು ಪ್ರಯಾಣಿಸುತ್ತಿದ್ದರು, ಇವರೆಲ್ಲ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಿಕೆರೆ ಬಳಿಕ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಕೇರಳದ ವಿದ್ಯಾರ್ಥಿನಿಯರು ಗೋವಾ ಪ್ರವಾಸಕ್ಕೆ ತೆರಳುತ್ತಿದ್ದರು, ನಿದ್ದೆ ಮಂಪರಿನಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬಸ್ ಮೇಲೆತ್ತಿದ್ದಾರೆ.


