ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ವಿಜಯ್ ಹಜಾರೆ ಪಂದ್ಯಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಪಂದ್ಯ ನಡೆಸುವ ಸಂಬಂಧ ಬೆಂಗಳೂರು ಆಯುಕ್ತ ಸೀಮಂತ್ ಕುಮಾರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಕ್ರೀಡಾಂಗಣಕ್ಕೆ ಆಗಮಿಸಿ ಸುರಕ್ಷತೆ ಬಗ್ಗೆ ಪರಿಶೀಲಿಸಿ ಬಳಿಕ ಸರ್ಕಾರಕ್ಕೆ ವರದಿ ನೀಡಲಾಗಿದೆ. ಎಲ್ಲವನ್ನೂ ಪರಿಶೀಲಿಸಿರುವ ಪೊಲೀಸರು ಪಂದ್ಯಕ್ಕೆ ಅನುಮತಿ ನಿರಾಕರಿಸಿದ್ದಾರೆ.
ಸ್ಟೇಡಿಯಂನಲ್ಲಿ ಇನ್ನಷ್ಟು ಸುರಕ್ಷತಾ ಕ್ರಮ ಅಳವಡಿಸಿಕೊಳ್ಳಬೇಕು , ನಾಳೆ ಪಂದ್ಯಕ್ಕೆ ವಿರಾಟ್ ಕೊಹ್ಲಿ ಆಗಮಿಸುವುದರಿಂದ ಹೊರಭಾಗದಲ್ಲಿ ಅಭಿಮಾನಿಗಳು ಹೆಚ್ಚಿನ ಸಂಕ್ಯೆಯಲ್ಲಿ ಸೇರುವ ಸಾಧ್ಯತೆ ಇದೆ. ಸ್ಟೇಡಿಯಂ ಗೇಟ್ ಹೊರಭಾಗದಲ್ಲಿಯೇ ಕಾಲ್ತುಳಿತ ದುರಂತ ಸಂಭವಿಸಿತ್ತು. ಹೀಗಾಗಿ ನಾಳೆ ಮತ್ತಷ್ಟು ಅಭಿಮಾನಿಗಳು ಸೇರಿದರೆ ಕಷ್ಟ. ಗೇಟ್ ಅಗಲೀಕರಣ ಮತ್ತು ಜನ ಒಡಾಡಲು ಅನುಕೂಲವಾಗುವ ವಾತಾವರಣದೊಂದಿಗೆ ಸ್ಟೇಡಿಯಂ ನಿರ್ಮಾಣ ಮಾಡದ ಕಾರಣ ಪೊಲೀಸರು ಪಂದ್ಯ ಆಯೋಜನೆಗೆ ಅನುಮತಿ ನೀಡಿಲ್ಲ.
ದೆಹಲಿ ಮತ್ತು ಆಂಧ್ರಪ್ರದೇಶದ ಮಧ್ಯೆ ಮೊದಲ ಪಂದ್ಯ ನಿಗದಿಯಾಗಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೆಹಲಿ ಪರ ಕಣದಲ್ಲಿ ಇರಲಿದ್ದಾರೆ. ಪ್ರೇಕ್ಷಕರಿಗೆ ಅವಕಾಶ ಇಲ್ಲದೆ ಪಂದ್ಯ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮುಖ್ಯಸ್ಥ ವೆಂಕಟೇಶ್ ಪ್ರಸಾದ್ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದ್ದರು.
ಜೂನ್ನಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿತ್ತು. ಮಹಿಳಾ ವಿಶ್ವಕಪ್ ಪಂದ್ಯ ಕೂಡ ಇಲ್ಲಿ ನೆಸಲು ಸವಕಾಶ ನೀಡಿರಲಿಲ್ಲ.


