ದೇಶದಲ್ಲಿ ಒಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಒಬಿಸಿಗಳು. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನಲೆಗೆ ತರಬೇಕು ಎಂದು ಒಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಕನಕಪುರದ ಬಿಜ್ಜಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಒಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದರು.
ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದರು.
ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಇರುವ ಕಾರಣಕ್ಕೆ ಪಕ್ಷದ ಒಬಿಸಿ ಸಲಹಾ ಮಂಡಳಿಯ ಸಭೆ ಕೆಪಿಸಿಸಿ ಕಚೇರಿಯಲ್ಲಿಯೇ ನಡೆಯಲಿ ಎಂದು ಸಲಹೆ ನೀಡಿದ್ದೆ. ಅದರಂತೆ ಇಲ್ಲಿ ಸಭೆ ಏರ್ಪಡಿಸಲಾಗಿದೆ. ರಾಷ್ಟ್ರಮಟ್ಟದ ಸುಮಾರು 40 ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.