ಪ್ರೀತಿ, ಮದುವೆ ಎಂದು ಪುರುಷರನ್ನು ನಂಬಿಸಿ ಅವರಿಂದ ಬೇಕಾಬಿಟ್ಟಿ ಹಣ ದೋಚಿಕೊಂಡು ಬಳಿಕ ತೊರೆದು ಹೋಗುವುದನ್ನೇ ಉದ್ಯೋಗ ಮಾಡಿಕೊಂಡಿದ್ದ ದೊಡ್ಡಬಳ್ಳಾಪುರ ಮಹಿಳೆ ವಿರುದ್ಧ ಸಂತ್ರಸ್ತರು ದೂರು ನೀಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ಹೀಗೆ ವಂಚಿಸುತಿರುವ ಆರೋಪಿ ಎನ್ನಲಾಗಿದೆ. ಆಕೆಯ ಮೊದಲ ಹಾಗೂ ಎರಡನೇ ಪತಿ ಪೊಲೀಸ್ ಠಾಣೆಗೆ ಹೋಗಿ ಈ ಸಂಬಂಧ ದೂರು ದಾಖಲಿಸಿದ್ದಾರೆ. ಸುಧಾರಾಣಿ ಹಣವಿರುವವರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಳು. ಈಗಾಗಲೇ ಮೂವರನ್ನು ಮದುವೆಯಾಗಿರುವ ಈಕೆ ಇಬ್ಬರು ಪತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ ಎಂದು ಸಂತ್ರಸ್ತರಿಬ್ಬರು ದೂರಿದ್ದಾರೆ.
ಸುಧಾರಾಣಿ ಮೊದಲು ವೀರೆಗೌಡ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗೆ ಇಬ್ಬರು ಮಕ್ಕಳು ಕಾರು ಮತ್ತು ಬುಲೆಟ್ ಓಡಿಸಲು ಬರಲ್ಲ ಎಂಬ ಕಾರಣ ಹೇಳಿ ಮಕ್ಕಳನ್ನು ಹಾಗೂ ವೀರೆಗೌಡರನ್ನು ತೊರೆದು ಹೋಗಿದ್ದಳು.
ನಂತರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅನಂತಮೂರ್ತಿ ಎಂಬವರನ್ನು ಸಂಪರ್ಕಿಸಿದ್ದಳು. ಗಂಡ ತೀರಿಹೋಗಿದ್ದಾರೆ ಎಂದು ಸುಳ್ಳು ಹೇಳಿ ಆತನನ್ನು ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆಯಾಗಿದ್ದಳು. ಒಂದೂಕಾಲು ವರ್ಷ ಅನಂತಮೂರ್ತಿ ಜೊತೆ ಸಂಸಾರ ಮಾಡಿ ನಾನಾ ಕಾರಣ ಹೇಳಿ 15 ರಿಂದ 20 ಲಕ್ಷ ರೂಪಾಯಿ ಪಡೆದಿದ್ದಳು ಎಂದು ಆರೋಪಿ ಸಲಾಗಿದೆ.
ಅನಂತಮೂರ್ತಿಯಿಂದ ಹಣ ಪಡೆದ ನಂತರ ಆತನನ್ನೂ ತೊರೆದ ವಂಚಕಿ ಕನಕಪುರ ಮೂಲದ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಈ ವಿಷಯ ತಿಳಿಯುತ್ತಿ ದ್ದಂತೆಯೇ ಮೊದಲ ಪತಿ ವೀರೆಗೌಡ ಮತ್ತು ಎರಡನೇ ಪತಿ ಅನಂತಮೂರ್ತಿ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಗೆ ತೆರಳಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಈ ಮಹಿಳೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಪತಿಯರು ಒತ್ತಾಯಿಸಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ.


